Hyderabad : ತೆಲಂಗಾಣದ ಚಾರ್ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ರವಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಚಾರ್ಮಿನಾರ್ ಬಳಿಯ ಗುಲ್ಟಾರ್ ಹೌಸ್ನಲ್ಲಿರುವ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶೀಘ್ರದಲ್ಲೇ ಮೂರು ಅಂತಸ್ತಿನ ಕಟ್ಟಡದ ಮೇಲೆ ಬೆಂಕಿ ವ್ಯಾಪಿಸಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಂಕಿಯನ್ನು ನಿಯಂತ್ರಣಕ್ಕೆ ತರಲು 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ . ವರದಿಯ ಪ್ರಕಾರ, ಭಾನುವಾರ ಮುಂಜಾನೆ ಸಂಭವಿಸಿದ ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ಮೇ 14 ರಂದು ನಡೆದ ಮತ್ತೊಂದು ಘಟನೆಯಲ್ಲಿ, ಹೈದರಾಬಾದ್ನ ಬೇಗಂ ಬಜಾರ್ನಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಒಬ್ಬ ಮಹಿಳೆಯನ್ನು ರಕ್ಷಿಸಿದ್ದರು. ಬೇಸಿಗೆ ರಜೆಗೆ ಬಂದಿದ್ದ ಮಕ್ಕಳು ಕೂಡ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ. ಮೂವರು ಮಹಿಳೆಯರು, ನಾಲ್ವರು ಮಕ್ಕಳು ಸೇರಿ 17 ಜನ ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಾನು ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಅವರು ಭರವಸೆ ನೀಡಿದರು.
ಕೇಂದ್ರ ಕಲ್ಲಿದ್ದಲು ಸಚಿವ ಮತ್ತು ಹೈದರಾಬಾದ್ ಸಂಸದ ಜಿ. ಕಿಶನ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಬೆಂಕಿಯ ಕಾರಣ ಮತ್ತು ನಡೆಯುತ್ತಿರುವ ರಕ್ಷಣಾ ಪ್ರಯತ್ನಗಳ ಬಗ್ಗೆ ವಿಚಾರಿಸಿದರು.
ಪ್ರಧಾನಿ ಪರಿಹಾರ ಘೋಷಣೆ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಕಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿ ಮೃತರ ಪ್ರತಿ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದರು.
ತೆಲಂಗಾಣದ ಹೈದರಾಬಾದ್ನಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

