ಹನೂರು: ತಾಲ್ಲೂಕಿನ ಪ್ರಸಿದ್ಧ ಪುಣ್ಯ ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇಗುಲದಲ್ಲಿ ನಡೆದ ಹುಂಡಿ ಹಣ ಎಣಿಕೆ ಕಾರ್ಯದಲ್ಲಿ 27 ದಿನಗಳ ಅವಧಿಯಲ್ಲಿ ಒಟ್ಟು ₹2.14 ಕೋಟಿ ಸಂಗ್ರಹವಾಗಿದೆ. ಜೊತೆಗೆ 09 ವಿದೇಶಿ ನೋಟುಗಳು, ₹2,000 ಮುಖಬೆಲೆಯ 03 ನೋಟುಗಳು ಸಹ ಹುಂಡಿಯಲ್ಲಿ ಪತ್ತೆಯಾಗಿವೆ.
ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು (ಎಇ) ಅವರ ನೇತೃತ್ವದಲ್ಲಿ ಬೆಳಿಗ್ಗೆ 7.00 ಗಂಟೆಯಿಂದ ಹುಂಡಿ ಹಣ ಎಣಿಕೆ ಕಾರ್ಯ ಆರಂಭವಾಯಿತು. 27 ದಿನಗಳಲ್ಲಿ ಹುಂಡಿ ಹಾಗೂ ಇ-ಹುಂಡಿ ಸೇರಿ ₹2,14,40,939/- ನಗದು, ಜೊತೆಗೆ ಚಿನ್ನ 45 ಗ್ರಾಂ ಹಾಗೂ ಬೆಳ್ಳಿ 2 ಕೆ.ಜಿ 320 ಗ್ರಾಂ ಸಂಗ್ರಹವಾಗಿದೆ.
ಅಮಾವಾಸ್ಯೆ–ಹುಣ್ಣಿಮೆ ದಿನಗಳು, ಸರ್ಕಾರಿ ರಜೆಗಳು ಹಾಗೂ ಸರ್ಕಾರದ ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರಕಿದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದರಿಂದ ಇಷ್ಟೊಂದು ದೊಡ್ಡ ಮೊತ್ತದ ಕಾಣಿಕೆ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಮಲೆ ಮಹದೇಶ್ವರಬೆಟ್ಟ ಬಸ್ ನಿಲ್ದಾಣದ ವಾಣಿಜ್ಯ ಕಟ್ಟಡದಲ್ಲಿ ಸಿ.ಸಿ. ಕ್ಯಾಮೆರಾ ಹಾಗೂ ಪೊಲೀಸರ ಕಣ್ಗಾವಲು ನಡುವೆ ಪ್ರಾಧಿಕಾರದ ಸಿಬ್ಬಂದಿಗಳು ಮತ್ತು ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ಸ್ಥಳೀಯ ಶಾಖೆಯ ಸಿಬ್ಬಂದಿಗಳು ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ ಜಿ.ಎಲ್., ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರ ಮಹದೇವ, ಲೆಕ್ಕಧೀಕ್ಷಕ ಗುರುಮಲ್ಲಯ್ಯ ಸರಗೂರು, ಮಹದೇವಸ್ವಾಮಿ, ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಭಾರತಿ (ಪ್ರ.ದ.ಸ.), ಬೆರಳಚ್ಚುಗಾರರು, ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು, ಕೊಳ್ಳೇಗಾಲದ ಬ್ಯಾಂಕ್ ಆಫ್ ಬರೋಡ ಮುಖ್ಯ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಮತ್ತು ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಮರಿಸ್ವಾಮಿ ಕಾಗಲವಾಡಿ, ಮಹದೇವಪ್ಪ ಕೀಳನಪುರ, ವಿಜಯ್ ಕುಮಾರ್ ಹಾಜರಿದ್ದರು.

