ಬೆಂಗಳೂರು : ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ನಗರದ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು, ಮೊದಲ ಹಂತದವರೆಗೆ ನಿರ್ಮಾಣಗೊಂಡಿದ್ದ ಕಟ್ಟಡ ಏಕಾಏಕಿ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿ ಕಾರ್ಮಿಕರು ಸಿಲುಕಿದ್ದಾರೆ.
ಸದ್ಯ ಲಭ್ಯವಾಗುತ್ತಿರುವ ಮಾಹಿತಿಯ ಪ್ರಕಾರ ಸುಮಾರು 16 ಜನಕಾರ್ಮಿಕರು ಈ ಕಟ್ಟಡದ ಅವಶೇಷಗಳ ಅಡಿ ಸಿಲುಕಿದ್ದು, ಆ ಪೈಕಿ ಮೂವರು ಈಗಾಗಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಕೆಲ ಕಾರ್ಮಿಕರನ್ನು ರಕ್ಷಿಸಲಾಗಿದ್ದು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಅವಶೇಷಗಳ ಅಡಿ ಸಿಲುಕಿರುವ ಉಳಿದ ಕಾರ್ಮಿಕರ ರಕ್ಷಣೆಗೆ ಅಗ್ನಿ ಶಾಮಕ ದಳ ಸಿಬ್ಬಂದಿ ಮುಂದಾಗಿದ್ದಾರೆ. ಈ ಘಟನೆಯಲ್ಲಿ ಇನ್ನು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಭಾರೀ ಮಳೆಯ ನಡುವೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಟ್ಟಡ ಕುಸಿಯುತ್ತಿದ್ದಂತೆ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಕಾರ್ಮಿಕನೊಬ್ಬನ ತಲೆಗೆ ಏಟು ಬಿದ್ದು, ಕಷ್ಟಪಟ್ಟು ಹೊರ ಬಂದು ಒಳಗೆ ಇನ್ನೂ ಕಾರ್ಮಿಕರು ಸಿಲುಕಿದ್ದಾರೆ. ಅವರನ್ನು ರಕ್ಷಣೆ ಮಾಡಬೇಕೆಂದು ಮಾಹಿತಿ ನೀಡಿದ್ದಾನೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

