ಕೋಲಾರ, ನವೆಂಬರ್ 25: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರು ಪ್ರತಿ ತಿಂಗಳೂ ಹಣಕ್ಕಾಗಿ ಕಾದು ಕುಳಿತಿರುವ ಪರಿಸ್ಥಿತಿ ಮುಂದುವರಿದಿದೆ. ನಿಯಮಿತವಾಗಿ ಹಣ ಜಮಾ ಆಗದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಅಸಮಾಧಾನವೂ ವ್ಯಕ್ತವಾಗಿತ್ತು. ಇದೀಗ ಶೀಘ್ರದಲ್ಲೇ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಹಣ ಬಾಕಿಯಿದೆ. ಆಗಸ್ಟ್ ತಿಂಗಳ ಕಂತು ಈಗಾಗಲೇ ಬಿಡುಗಡೆಯಾಗಿದ್ದು, ಉಳಿದ ಎರಡು ತಿಂಗಳ ಹಣವನ್ನೂ ಶೀಘ್ರದಲ್ಲೇ ನೀಡಲಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೇಶದಲ್ಲೇ ಮಾದರಿಯಾಗಿದ್ದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ICDS) ಯನ್ನು ಸಮರ್ಪಕವಾಗಿ ಜಾರಿಗೆ ತಂದ ರಾಜ್ಯ ಕರ್ನಾಟಕವೇ ಎಂದು ಹೇಳಿದರು.
ಮಹಿಳೆ-ಮಕ್ಕಳ ಹಿತಕ್ಕಾಗಿ ಹಲವು ಯೋಜನೆಗಳನ್ನು ನೀಡಿದ ಕ್ರೆಡಿಟ್ ಕಾಂಗ್ರೆಸ್ ಪಕ್ಷಕ್ಕೇ ಸೇರುತ್ತದೆ ಎಂದು ಹೇಳಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ನೆರವಾಗುವ ಸಲುವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು.
2023ರ ಚುನಾವಣೆಯ ಪೂರ್ವದಲ್ಲಿ ನೀಡಿದ ಭರವಸೆಯಂತೆ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಸಂಪೂರ್ಣವಾಗಿ ಜಾರಿಗೆ ತಂದಿದ್ದೇವೆ. ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಪಕ್ಷ ಮಾಡುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಇದೆ ವೇಳೆ, ದೇಶದ ಬಡತನ ನಿವಾರಣೆಗೆ ಕಾಂಗ್ರೆಸ್ ಸರ್ಕಾರ ಕೈಗೊಂಡ ಕೆಲಸಗಳನ್ನೂ ಅವರು ನೆನಪಿಸಿಕೊಂಡರು. 1973ರ ಅಕ್ಟೋಬರ್ 2ರಂದು ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇಂದಿರಾ ಗಾಂಧಿಯವರು ಅಂಗನವಾಡಿ ಕೇಂದ್ರಗಳಿಗೆ ಚಾಲನೆ ನೀಡಿದ್ದು, ಇಂದು ಬಡ ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಉತ್ತಮ ಶಿಕ್ಷಣ ಸಿಗುವ ವ್ಯವಸ್ಥೆ ಆಗಿರುವುದನ್ನು ಉಲ್ಲೇಖಿಸಿದರು.
ಜನರಿಗೆ ಸಹಾಯಕವಾಗುವ ಸಲುವಾಗಿ ಆರ್ಟಿಇ, ಆರ್ಟಿಐ, ಆಹಾರ ಭದ್ರತೆ ಕಾಯ್ದೆ, ಮಹಿಳೆಯರಿಗೆ ಮೀಸಲಾತಿ, ಸ್ಥಳೀಯ ಆಡಳಿತದಲ್ಲಿ 50% ಮೀಸಲಾತಿ ಸೇರಿದಂತೆ ಹಲವು ಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.

