ಗೋವಾ : ಉತ್ತರ ಗೋವಾದ ಶಿರ್ಗಾಂವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಮಾಪುಸಾದ ಗೋವಾ ವೈದ್ಯಕೀಯ ಕಾಲೇಜು ಮತ್ತು ಉತ್ತರ ಗೋವಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ನೋಡಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಸ್ಥಳೀಯರು ಮತ್ತು ಸ್ವಯಂಸೇವಕರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು ಎಂದು ಹೇಳಿದ್ದಾರೆ.
ಆಘಾತ ವ್ಯಕ್ತಪಡಿಸಿದ ಸಿಎಂ ಸಾವಂತ್ :
ಇನ್ನು ಘಟನೆ ಬಗ್ಗೆ ಸಿಎಂ ಪ್ರಮೋದ್ ಸಾವಂತ್ ಮಾಡುವ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ. ಇಂದು ಬೆಳಿಗ್ಗೆ ಶಿರ್ಗಾಂವ್ನ ಲೈರೈ ಜತ್ರಾದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದಿಂದ ತೀವ್ರ ದುಃಖಿತನಾಗಿದ್ದೇನೆ. ನಾನು ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದ್ದು, ಸಂತ್ರಸ್ತ ಕುಟುಂಬಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದೇನೆ. ಅಗತ್ಯ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪ್ರಧಾನಿ ಕರೆ :
ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಮಾತನಾಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಈ ಸಂದರ್ಭದಲ್ಲಿ ತಮ್ಮ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

