ಕೊಚ್ಚಿ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಇಲ್ಲಿಗೆ ಸಮೀಪದ ಕಾಲಮಸ್ಸೇರಿಯಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (HMT) ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಾರ್ಖಾನೆಯ ಎಲ್ಲಾ ವಿಭಾಗಳಿಗೆ ಖುದ್ದು ಭೇಟಿ ನೀಡಿ ವೀಕ್ಷಿಸಿದರಲ್ಲದೆ, ಉತ್ಪಾದನೆ, ಬೇಡಿಕೆ ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು ಹಾಗೂ ಭವಿಷ್ಯದ ಯೋಜನೆಗಳ ಬಗ್ಗೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರು ಯಂತ್ರೋಪಕರಣಗಳ ಕ್ಷಮತೆ, ಕಾರ್ಮಿಕರ ಸ್ಥಿತಿಗತಿಗಳು, ಆಡಳಿತ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು. ಕಾರ್ಖಾನೆ ವೀಕ್ಷಣೆಯ ನಂತರ ಸಚಿವರು ಕಾರ್ಮಿಕರ ಜತೆ ಸಂವಾದ ನಡೆಸಿದರು. ಬಳಿಕ ಕಾರ್ಮಿಕ ಸಂಘಟನೆಗಳ ಮುಖಂಡರ ಅಹವಾಲು ಆಲಿಸಿದರು.
ಸದ್ಯಕ್ಕೆ ಕಾರ್ಖಾನೆ ಎದುರಿಸುತ್ತಿರುವ ಸವಾಲು, ಸಮಸ್ಯೆಗಳು ಹಾಗೂ ಅದಕ್ಕೆ ಕೈಗೊಳ್ಳಬೇಕಿರುವ ಕ್ರಮಗಳು, ಪರಿಹಾರಗಳ ಬಗ್ಗೆ ಅಧಿಕಾರಿಗಳು, ಕಾರ್ಮಿಕರು, ವಿವಿಧ ವಿಭಾಗಗಳ ಮುಖ್ಯಸ್ಥರಿಂದ ಮಾಹಿತಿ ಪಡೆದುಕೊಂಡರು. ಅಲ್ಲದೆ; ಕಾರ್ಮಿಕರ ಬೇಡಿಕೆಗಳ ಬಗ್ಗೆಯೂ ಅವರು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಮೆಕ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಅಡಿಯಲ್ಲಿ ಕೈಗಾರಿಕಾ ಉತ್ಪಾದನೆ ಹೆಚ್ಚಳದ ಮೂಲಕ ಜಿಡಿಪಿ ವೃದ್ಧಿಗೆ ವೇಗ ಕೊಡುವುದು, ಆ ಮೂಲಕ ಭಾರತವನ್ನು ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವ ಕನಸನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಿದೆ. ಆ ನಿಟ್ಟಿನಲ್ಲಿ ನಾವು ಕ್ಷಮತೆ, ದಕ್ಷತೆಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳು, ಕಾರ್ಮಿಕರಿಗೆ ಸಚಿವರು ಒತ್ತಿ ಹೇಳಿದರು.
ಭಾರತದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದಾಗಿದ್ದ ಹೆಚ್ ಎಂಟಿ ಕಾರ್ಖಾನೆಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪ್ರಧಾನಿಗಳ ಮಾರ್ಗದರ್ಶನದಲ್ಲಿ ಎಲ್ಲಾ ರೀತಿಯ ಮಾರ್ಗೋಪಾಯಗಳನ್ನು ಹುಡುಕಲಾಗುತ್ತಿದೆ. ಈಗಾಗಲೇ ನಾನು ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿರುವ ಹೆಚ್ ಎಂಟಿ ಘಟಕಗಳಿಗೆ ಭೇಟಿ ನೀಡಿದ್ದೇನೆ ಎಂದು ಸಚಿವರು ಹೇಳಿದರು.
ತಮ್ಮ ಭೇಟಿ ನಿಮಿತ್ತ ಕಾರ್ಖಾನೆಯ ಕಚೇರಿಯ ಆವರಣದಲ್ಲಿ ಸಚಿವರು ಗಿಡ ನೆಟ್ಟು ನೀರೆರೆದರು. ಅಲ್ಲದೆ; ಕಾರ್ಮಿಕರ ಜತೆ ರಕ್ಷಾಬಂಧನ ಸಂಭ್ರಮದಲ್ಲಿ ಸಚಿವರು ಪಾಲ್ಗೊಂಡರು. ಅಲ್ಲಿನ ಮಹಿಳಾ ಉದ್ಯೋಗಿಗಳು ಸಚಿವರಿಗೆ ರಾಖಿ ಕಟ್ಟಿದರು.

