ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಗಿ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಸಿಂಗ್ ಮರ್ಲೆನಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸಮಾರಂಬದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದರು. ಸಿಎಂ ಅತಿಶಿ ಅವರೊಂದಿಗೆ ಆಮ್ ಆದ್ಮಿ ಪಕ್ಷದ ಸೌರಭ್ ಭಾರಧ್ವಜ್ , ಗೋಪಾಲ್ ರಾಯ್, ಇಮ್ರಾನ್ ಹುಸ್ಸೇನ್, ಕೈಲಾಶ್ ಗೆಹ್ಲೋತ್ ಮತ್ತು ಮುಖೇಶ್ ಅಹ್ಲಾವತ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅರವಿಂದ್ ಕೇಜ್ರಿವಾಲ್ ರನ್ನು ಮತ್ತೆ ಸಿಎಂ ಮಾಡುವುದೇ ನಮ್ಮ ಗುರಿ ಎಂದು ನೂತನ ಸಿಎಂ ಅತಿಶಿ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಿತೂರಿ ನಡೆಸಿತು, ಅವರನ್ನು 6 ತಿಂಗಳು ಜೈಲಿನಲ್ಲಿ ಇರಿಸಿತು, ಅವರನ್ನು ನಾಶ ಮಾಡಲು ಪ್ರಯತ್ನಿಸಿತು. ಆದರೆ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿತು. ಇಡಿ ಮತ್ತು ಸಿಬಿಐ ಕೇಂದ್ರ ಸರ್ಕಾರದ ಗಿಳಿಗಳಾಗಿ ಮಾರ್ಪಟ್ಟಿದೆ ಎಂದು ಅತಿಶಿ ಆರೋಪಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಜನತಾ ನ್ಯಾಯಾಲಯಕ್ಕೆ ಹೋಗುತ್ತೇನೆ ಎಂದು ಹೇಳಿದರು. ಇನ್ನುಮುಂದೆ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿರುವುದಿಲ್ಲ ಎಂಬುದು ಬಹಳ ಬೇಸರದ ಸಂಗತಿ. ಆದರೆ, ಮುಂದಿನ ವರ್ಷದ ಚುನಾವಣೆಯವರೆಗೆ ಮಾತ್ರ ನಾನು ಮುಖ್ಯಮಂತ್ರಿಯಾಗಿರುತ್ತೇನೆ. ಮತ್ತೆ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಗೆದ್ದರೆ ಅರವಿಂದ್ ಕೇಜ್ರಿವಾಲ್ ಅವರೇ ಸಿಎಂ ಆಗುತ್ತಾರೆ. ಈಗ ನಮ್ಮ ಕೆಲಸವೆಂದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಸಿಎಂ ಮಾಡುವುದು” ಎಂದು ಹೊಸ ದೆಹಲಿ ಸಿಎಂ ಅತಿಶಿ ಹೇಳಿದ್ದಾರೆ.

