ಶ್ರೀನಗರ : ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರನ್ನು ನೇಮಕ ಮಾಡಲಾಗುವುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುತ್ತಿದೆ. ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ. ಜಮ್ಮು-ಕಾಶ್ಮೀರದ ಜನರು ನಮ್ಮ ಪರವಾಗಿ ಮತ ನೀಡಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ.
ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಜನರು ತಮ್ಮ ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಇತ್ತೀಚಿನ ಇಸಿ ಅಂಕಿಅಂಶಗಳ ಪ್ರಕಾರ, ಜೆಕೆಎನ್ಸಿ 3 ಸ್ಥಾನಗಳನ್ನು ಗೆದ್ದಿದೆ ಮತ್ತು ಇದುವರೆಗೆ 39 ರಲ್ಲಿ ಮುನ್ನಡೆ ಸಾಧಿಸಿದೆ ಮತ್ತು ಕಾಂಗ್ರೆಸ್ 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಒಮರ್ ಅಬ್ದುಲ್ಲಾ ಅವರು ಈ ಚುನಾವಣೆಯಲ್ಲಿ ಬುದ್ಗಾಮ್ ಮತ್ತು ಗಂದರ್ಬಲ್ ಎಂಬ ಎರಡು ಸ್ಥಾನಗಳಿಂದ ನಾಮಪತ್ರ ಸಲ್ಲಿಸಿದ್ದರು. ಅವರು ಬುದ್ಗಾಮ್ನಿಂದ ಚುನಾವಣೆಯಲ್ಲಿ ಗೆದ್ದು ಗಂದರ್ಬಾಲ್ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಒಮರ್ ಅಬ್ದುಲ್ಲಾ ಸಿಎಂ ಆಗುವುದಾದರೆ ಅದು ಅವರ ಬೆಂಬಲಿಗರಿಗೆ ಸಂತಸದ ವಿಷಯವಾಗಿದೆ ಏಕೆಂದರೆ ಒಮರ್ ಒಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದರು. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ ಸಿಗುವವರೆಗೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಒಮರ್ ಹೇಳಿದ್ದರು. ಆದರೆ, ಚುನಾವಣಾ ದಿನಾಂಕ ಘೋಷಣೆಯಾದ ನಂತರ ಅವರ ಸ್ವರ ಬದಲಾಯಿತು ಮತ್ತು ಅವರು ತಮ್ಮ ನಿರ್ಧಾರವನ್ನು ಬದಲಾಯಿಸಿದರು. ಅಷ್ಟೇ ಅಲ್ಲ ತಲಾ ಎರಡು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಿದ್ದರು.
ಜನರ ತೀರ್ಪಿಗೆ ತಲೆಬಾಗುತ್ತೇನೆ : ಮುಫ್ತಿ ಪುತ್ರಿ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಸೋಲೊಪ್ಪಿಕೊಂಡಿದ್ದಾರೆ. ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ ಅವರು 5,000ಕ್ಕೂ ಹೆಚ್ಚು ಮತಗಳಿಂದ ಪರಾಭವಗೊಂಡಿದ್ದಾರೆ.
ನಾನು ಜನರ ತೀರ್ಪನ್ನು ಸ್ವೀಕರಿಸುತ್ತೇನೆ. ಬಿಲ್ಬೆಹರಾದಲ್ಲಿ ನಾನು ಜನರಿಂದ ಸ್ವೀಕರಿಸಿರುವ ಪ್ರೀತಿ ಮತ್ತು ಅಕ್ಕರೆ ಎಂದೂ ನನ್ನ ನೆನಪಿನಲ್ಲಿರುತ್ತದೆ. ಇಡೀ ಚುನಾವಣಾ ಪ್ರಚಾರದಲ್ಲಿ ಕಠಿಣ ಪರಿಶ್ರಮ ಹಾಕಿದ ಪಿಡಿಪಿ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಇದೇ ಪ್ರಥಮ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದ ಇಲ್ತಿಜಾ ಮುಫ್ತಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ 90 ಸದಸ್ಯಬಲ ಹೊಂದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 1 ರವರೆಗೆ ಮೂರು ಹಂತಗಳಲ್ಲಿ ಮತದಾನ ನಡೆದವು. ಇದು 10 ವರ್ಷಗಳಲ್ಲಿ ನಡೆದ ಮೊದಲ ಚುನಾವಣೆಯಾಗಿದೆ. ಸದ್ಯ ಕಾಂಗ್ರೆಸ್ 50ರಲ್ಲಿ ಮತ್ತು ಬಿಜೆಪಿ 20 ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ. ಸ್ಪಷ್ಟ ಬಹುಮತ ದಾಟಿ ಸರ್ಕಾರ ರಚನೆಯತ್ತ ಕಾಂಗ್ರೆಸ್ ದಾಪುಗಾಲು ಇಡುತ್ತಿದೆ.

