ಬೆಂಗಳೂರು : ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಬಂಧಿತರ ವಿಚಾರಣೆ ವೇಳೆ ತಿಳಿದುಬಂದ ಸ್ಫೋಟಕ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಜಿಗಣಿ ಪೊಲೀಸರು ಇದೀಗ ದೇಶದಾದ್ಯಂತ ಸಕ್ರಿಯರಾಗಿದ್ದ 14 ಮಂದಿ ಪಾಕಿಸ್ತಾನೀಯರನ್ನು ಬಂಧಿಸಿದ್ದಾರೆ.
14 ಮಂದಿಯ ಬಂಧನದೊಂದಿಗೆ ದೇಶದಲ್ಲಿ ಜಿಗಣಿ ಹಾಗೂ ಕರ್ನಾಟಕ ಪೊಲೀಸರು ಬಂಧಿಸಿದ ಪಾಕಿಸ್ತಾನಿ ಪ್ರಜೆಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಇವರೆಲ್ಲ ದೇಶದ ನಾನಾ ಭಾಗಗಳಲ್ಲಿ ಅಡಗಿ ಕುಳಿತಿದ್ದರು. ಪ್ರಕರಣದ ಕಿಂಗ್ಪಿನ್ ಪರ್ವೇಜ್ ಬಂಧನದ ಬೆನ್ನಲ್ಲೇ ಇನ್ನಿತರರು ಪೊಲೀಸ್ ಬಲೆಗೆ ಬಿದ್ದಿದ್ದಾರೆ.
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಅರೆಸ್ಟ್ ಆದ ಬೆನ್ನಲ್ಲೇ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಿ ವಿವಿಧ ರಾಜ್ಯಗಳಿಗೆ ಕಳುಹಿಸಿಕೊಡಲಾಗಿತ್ತು. ಚೆನ್ನೈ, ದೆಹಲಿ, ಹೈದರಾಬಾದ್ಗೆ ತೆರಳಿದ್ದ ಪೊಲೀಸರ ತಂಡ ಮೆಹದಿ ಫೌಂಡೇಷನ್ ಸಂಪರ್ಕದಲ್ಲಿದ್ದ ಒಟ್ಟು 22 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ್ದರು. ವಿಚಾರಣೆಯ ಬಳಿಕ ನ್ಯಾಯಾಧೀಶರು ಎಲ್ಲಾ ಆರೋಪಿಗಳನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು.
ಇಂದು ಬೆಂಗಳೂರಿನ 4ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಜಡ್ಜ್ ಸಲ್ಮಾ ಮುಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪೊಲೀಸರು ಆರೋಪಿಗಳನ್ನು ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಬಳಿಕ ಪಾಕಿಸ್ತಾನ ಪ್ರಜೆಗಳಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

