ಲಾಂಗ್ ಬಿಟ್ಟು ಶಿವಣ್ಣ ಈಗ ಪೆನ್ನು ಹಿಡಿಯುತ್ತಿದ್ದಾರೆ. ಪ್ರತಿ ಬಾರಿಯೂ ವಿಭಿನ್ನ ಪಾತ್ರಗಳ ಮೂಲಕ ಪರಕಾಯ ಪ್ರವೇಶಿಸುವ ಕರುನಾಡ ಕಿಂಗ್ ಶಿವರಾಜ್ ಕುಮಾರ್ ಈಗ ಮಾಸ್ ನಿಂದ ಮೇಸ್ಟ್ರಾಗಿ ಬದಲಾಗುತ್ತಿದ್ದಾರೆ. ಭಜರಂಗಿ ಈಗ ಭೋದಕನಾಗಿದ್ದಾರೆ. ಭೈರತಿ ರಣಗಲ್ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಶಿವಣ್ಣ ಹೊಸ ಸಿನಿಮಾ ಘೋಷಿಸಿದ್ದಾರೆ.
ಇಂದು ಮಕ್ಕಳ ದಿನಾಚರಣೆ ದಿನದಂದು ಶಿವಣ್ಣ ಮಕ್ಕಳ ಸಿನಿಮಾದಲ್ಲಿ ನಟಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ.ಶಿವಣ್ಣ-ಶ್ರೀನಿ ಕಾಂಬೋದ A for ಆನಂದ್ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
‘ಸುಂದರ ಕಾಂಡ’ದಲ್ಲಿ ಸಿನಿಮಾದಲ್ಲಿ ಟೀಚರ್ ಆಗಿ ಅಭಿನಯಿಸಿದ್ದ ಕರುನಾಡ ಕಿಂಗ್ ಈಗ ಬಹಳ ವರ್ಷದ ಬಳಿಕ ಈ ರೀತಿಯ ಪಾತ್ರ ಒಪ್ಪಿಕೊಂಡಿದ್ದಾರೆ. ವಿಶೇಷ ಅಂದರೆ ಇದು ನೈಜ ಘಟನೆಯಾಧಾರಿತ ಸಿನಿಮಾ. ಗುರುವಾಗುತ್ತಿರುವ ಶಿವಣ್ಣನಿಗೆ ಓಂಕಾರ ಹಾಕೋದಿಕ್ಕೆ ಘೋಸ್ಟ್ ಸೂತ್ರಧಾರ ಶ್ರೀನಿ ಸಜ್ಜಾಗಿದ್ದಾರೆ. ಶ್ರೀನಿ ಬೇರೆ ತರಹದ ಕಥೆ ಮಾಡಿಕೊಂಡು ಬಂದಿದ್ದಾರೆ. ಪಾತ್ರ ಕೂಡಾ ರೆಗ್ಯುಲರ್ ಆಗಿಲ್ಲ. ಈ ಸಿನಿಮಾದಲ್ಲಿ ಒಂದೊಳ್ಳೆಯ ಸಂದೇಶ ಇರಲಿದೆ.
ವೇದ, ಭೈರತಿ ರಣಗಲ್ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ನೀಡಿರುವ ಗೀತಾ ಶಿವರಾಜ್ ಕುಮಾರ್ ಒಡೆತನದ ಗೀತಾ ಪಿಕ್ಚರ್ಸ್ ಈ ಚಿತ್ರ ನಿರ್ಮಾಣ ಮಾಡುತ್ತಿದೆ. A for ಆನಂದ್ ಸಿನಿಮಾಗೆ ಬಹುತೇಕ ಘೋಸ್ಟ್ ತಾಂತ್ರಿಕ ವರ್ಗವೇ ಕೆಲಸ ಮಾಡುತ್ತಿದೆ. ಮಹೇನ್ ಸಿಂಹ ಕ್ಯಾಮೆರಾ, ದೀಪು ಎಸ್ ಕುಮಾರ್ ಸಂಕಲನ, ಪ್ರಸನ್ನ ವಿಎಂ ಸಂಭಾಷಣೆ ಚಿತ್ರಕ್ಕಿದೆ. ಮಾರ್ಚ್ ಅಥವಾ ಎಪ್ರಿಲ್ ತಿಂಗಳಲ್ಲಿ ಇಡೀ ತಂಡ ಶೂಟಿಂಗ್ ಆರಂಭಿಸಲಿದೆ.

