ಬೆಳ್ತಂಗಡಿ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಇಂದಿನಿಂದ 30ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.
ಇಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಪ್ರಾರಂಭಗೊಳ್ಳುತ್ತವೆ.ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ಮಿಕ್ಕಿ ಭಕ್ತರು ಉಜಿರೆಯಿಂದ ಹೊರಟು ಧರ್ಮಸ್ಥಳಕ್ಕೆ ಭಜನೆ, ದೇವರ ನಾಮಸರಣೆಯೊಂದಿಗೆ ಪಾದಯಾತ್ರೆಯಲ್ಲಿ ಬರುವರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಪಾದಯಾತ್ರೆಯಲ್ಲಿ ಭಾಗವಹಿಸುವರು. ಬಳಿಕ ಸಂಜೆ 7 ಗಂಟೆಗೆ ಹೆಗ್ಗಡೆಯವರು ಅಮೃತವರ್ಷಿಣಿ ಸಭಾಭವನದಲ್ಲಿ ಭಕ್ತರಿಗೆ ಮಾರ್ಗದರ್ಶನ ನೀಡುವರು.
ಧರ್ಮಸ್ಥಳದಲ್ಲಿ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ.
ಪ್ರೌಢಶಾಲಾ ಆವರಣದಲ್ಲಿ ಮುನ್ನೂರಕ್ಕೂ ಹೆಚ್ಚು ಮಳಿಗೆಗಳಿರುವ ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನ ಆಯೋಜಿಸಿದ್ದು, ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮಿಕೊಳ್ಳಲಾಗಿದೆ.
ರಾತ್ರಿ ಹೊಸಕಟ್ಟೆ ಉತ್ಸವ, ನಾಳೆ ರಾತ್ರಿ ಕೆರೆಕಟ್ಟೆ ಉತ್ಸವ, ಗುರುವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ ಮತ್ತು ಶನಿವಾರ ರಾತ್ರಿ ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯುತ್ತದೆ. ಪ್ರತಿ ವರ್ಷದಂತೆ ಲಕ್ಷದೀಪೋತ್ಸವದ ದಿನ ಶನಿವಾರ ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಧರ್ಮಸ್ಥಳಕ್ಕೆ ಬರುತ್ತಾರೆ.