ಬೆಂಗಳೂರು : ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಂದಿನಿ ಲೇಔಟ್ ನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೊಟ್ಟೆ ದಾಳಿ ಹಿನ್ನೆಲೆಯಲ್ಲಿ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ.
ಈ ವೇಳೆ ಕಾಂಗ್ರೆಸ್ ಬೆಂಬಲಿಗರು ಕೂಡಾ ಪ್ರತಿಭಟನೆ ನಡೆಸಿದ್ದು, ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡುವೆ ಗಲಾಟೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಕಾರು ಜಖಂಗೊಳಿಸಿರುವ ಆರೋಪವೂ ಕೇಳಿಬಂದಿದೆ. ಪ್ರತಿಭಟನೆ ವೇಳೆಯಲ್ಲಿ 2-3 ಕಾರುಗಳ ಜಖಂಗೊಂಡಿದ್ದು, ಕೆಲ ಮಂದಿಗೆ ಹಲ್ಲೆಯಾಗಿದೆ ಎನ್ನಲಾಗಿದೆ.
ಮೊಟ್ಟೆಯಲ್ಲಿ ಕೆಮಿಕಲ್ ಮಾದರಿಯ ಪದಾರ್ಥ :
ಮುನಿರತ್ನ ಆರೋಗ್ಯ ವಿಚಾರಿಸಲು ಬಿಜೆಪಿ ನಾಯಕರು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಸಂಸದ ಡಾ ಮಂಜುನಾಥ್ ಸಹ ಆಸ್ಪತ್ರೆಗೆ ಭೇಟಿ ನೀಡಿ ಮುನಿರತ್ನ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶಾಸಕ ಮುನಿರತ್ನ ನಾಯ್ಡು ತಲೆ ಹಿಂಭಾಗಕ್ಕೆ ಪೆಟ್ಟು ಬಿದ್ದಿದೆ. ಕೆಮಿಕಲ್ ಮಾದರಿಯ ಪದಾರ್ಥದಿಂದ ಅವರಿಗೆ ಹೊಡೆದಿದ್ದಾರೆ. ಇದರಿಂದ ತಲೆ ಸುತ್ತು, ವಾಂತಿ ಬಂದಂತೆ ಆಗುತ್ತಿದೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಮೊಟ್ಟೆ ದಾಳಿಯಿಂದ ಮುನಿರತ್ನ ಕೂದಲು ಸ್ವಲ್ಪ ಬರ್ನ್ ಆಗಿದೆ. ಹಲವು ತಿಂಗಳಿಂದ ಕೆಲವು ರಾಜಕೀಯ ಘಟನೆಗಳನ್ನು ನೋಡಿದ್ರೆ ಮುನಿರತ್ನ ನಾಯ್ಡುಗೆ ಟಾರ್ಗೆಟ್ ಮಾಡುತ್ತಿದ್ದಂತೆ ಕಾಣುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ರಾಜಕೀಯ ಮಾಡಬೇಕು ಎಂದರು.
ಘಟನೆ ಖಂಡಿಸಿದ ಬಿಜೆಪಿ ನಾಯಕರು :
ಕಾನೂನು ಕೈಗೆ ತೆಗೆದುಕೊಳ್ಳುವುದು ನಿಮ್ಮಂಥವರಿಗೆ ಶೋಭೆ ತರುವುದಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೇಳಬಯಸುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಘಟನೆಯನ್ನು ಖಂಡಿಸಿದರು.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರ ಮೇಲೆ ಆರೋಪಗಳಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳುತ್ತಿದೆ. ಕೋರ್ಟ್ ಜಾಮೀನು ಕೊಟ್ಟಿದೆ. ಆದರೆ, ಅವರ ಕ್ಷೇತ್ರಕ್ಕೆ ಹೋಗಬಾರದೆಂದು ಹೇಳಿದೆಯೇ ಎಂದು ಪ್ರಶ್ನಿಸಿದರು.
ತುರ್ತು ಪರಿಸ್ಥಿತಿಯಲ್ಲಿ ನಿಮ್ಮ ಪೂರ್ವಜರಾದ ಇಂದಿರಾ ಗಾಂಧಿ, ಸಂಜಯ್ ಗಾಂಧಿ ಥರದ ಕೆಲ ವ್ಯಕ್ತಿಗಳಂತೆ ಮಾಡುವುದು ಸರಿಯಲ್ಲ. ನೀವು ಕಾನೂನು ಕೈಗೆತ್ತಿಕೊಂಡು ಹಲ್ಲೆ ಮಾಡುವುದು, ಮೊಟ್ಟೆ ಎಸೆಯುವುದು ಖಂಡನೀಯ. ಇವತ್ತಿಗೂ ಸಿ.ಟಿ. ರವಿಯವರ ದೂರು ಆಧರಿಸಿ ಎಫ್ಐಆರ್ ದಾಖಲಿಸಿಲ್ಲ; ಸ್ವಯಂಪ್ರೇರಿತ ಆಗಿದೆ ಎನ್ನುತ್ತಾರೆ ಎಂದು ಜೋಶಿ ಹರಿಹಾಯ್ದರು.
ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಹುನ್ನಾರ :
ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿಕೆ ಸುರೇಶ್, ಡಿಕೆ ಶಿವಕುಮಾರ್ ಅವರ ಕಡೆಯವರಿಂದ ನನ್ನ ಮೇಲೆ ಆಸೀಡ್ ದಾಳಿ ನಡೆದಿದೆ ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.
ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಡಿಕೆ ಸುರೇಶ್ ಅವರಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎಂಬ ಆಸೆ ಇದೆ. ಈ ಕಾರಣಕ್ಕೆ ನನ್ನ ಮೇಲೆ ದಾಳಿ ನಡೆದಿದೆ ಎಂದು ದೂರಿದರು.
ಇದು ಕಾಂಗ್ರೆಸ್ ಪ್ರೇರಿತ ಕೃತ್ಯವಾಗಿದ್ದು ಡಿಕೆ ಸುರೇಶ್, ಡಿಕೆ ಶಿವಕುಮಾರ್, ಕುಸುಮ ತಂದೆ ಹನುಮಂತರಾಯಪ್ಪ ಇದಕ್ಕೆ ನೇರ ಹೊಣೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ಕಲವರು ಮನೆಯ ಮುಂದೆಯೇ ಬಂದು ರಾಜೀನಾಮೆ ಕೊಡಿ. ಇಲ್ಲದೇ ಇದ್ದರೆ ನಿಮ್ಮನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ತಿಳಿಸಿದರು.

