Banu Mushtaq : ಬಳ್ಳಾರಿಯಲ್ಲಿ ಡಿಸೆಂಬರ್ನಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಕನ್ನಡದ ಪ್ರಸಿದ್ಧ ಮಹಿಳಾ ಸಾಹಿತಿ ಹಾಸನ ಜಿಲ್ಲೆಯ ಬಾನು ಮುಷ್ತಾಕ್ ಅವರು ಬರೆದ ಸಣ್ಣ ಕಥಾಸಂಕಲನ ಹಾರ್ಟ್ ಲ್ಯಾಂಪ್ (ಎದೆಯ ಹಣತೆ) ಕೃತಿಯನ್ನು ಇಂಗ್ಲೀಷ್ಗೆ ಟ್ರಾನ್ಸ್ಲೇಟ್ ಮಾಡಿದವರೇ ಮಡಿಕೇರಿ ಮೂಲದ ಅನುವಾದಕಿ ದೀಪಾ ಬಸ್ತಿ ಅವರು. ಲಂಡನ್ನಲ್ಲಿ ಪ್ರಶಸ್ತಿ ಪಡೆಯುವಾಗ ದೀಪಾ ಬಸ್ತಿ ಕೂಡ ಬಾನು ಮುಷ್ತಾಕ್ ಅವರ ಜೊತೆಯಲ್ಲಿದ್ದರು. 2025ರ ಮೇ 21ರಂದು ನಡೆದ ಸಮಾರಂಭದಲ್ಲಿ ಈ ಇಬ್ಬರು ಬೂಕರ್ ಪ್ರಶಸ್ತಿ ಸ್ವೀಕರಿಸಿದ್ದರು.
ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ನಾಡು, ನುಡಿಯ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದು, ಕನ್ನಡ ಭಾಷೆಯ ಸಾಮರ್ಥ್ಯ ಹಾಗೂ ಶಕ್ತಿಯನ್ನು ಜಗತ್ತಿಗೆ ತೋರಿಸಿದ, ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೆ ಹೊಸ ಅರ್ಥ ತಂದವರು ಬಾನು ಮುಷ್ತಾಕ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

