ನವದೆಹಲಿ : ಉಪರಾಷ್ಟ್ರಪತಿ ಜಗದೀಪ್ ಧನಖರ್ ಸೋಮವಾರ ಸಂಜೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಅಂಗೀಕರಿಸಿದ್ದಾರೆ. ಜಗದೀಪ್ ಧನಖರ್ ಸೋಮವಾರ ಸಂಜೆ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಹೃದಯ ಸಂಬಂಧಿ ಕಾಯಿಲೆಗಳ ನಂತರ ಅವರನ್ನು ಈ ವರ್ಷದ ಮಾರ್ಚ್ನಲ್ಲಿ 4 ದಿನಗಳ ಕಾಲ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ಜಗದೀಪ್ ಧನಖರ್ ಅವರು ಆರೋಗ್ಯಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತಾವು ರಾಜೀನಾಮೆ ನೀಡುತ್ತಿರುವುದಾಗಿ ಜಗದೀಪ್ ಧನಖರ್ ತಿಳಿಸಿದ್ದಾರೆ. “ಆರೋಗ್ಯಕ್ಕೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ಸಂವಿಧಾನದ 67(ಎ) ವಿಧಿಯ ಪ್ರಕಾರ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅವರು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.
ಕೇಂದ್ರ ಗೃಹ ಸಚಿವಾಲಯವು ಉಪರಾಷ್ಟ್ರಪತಿ ಜಗದೀಪ್ ಧನಖರ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿರುವ ಗೃಹ ಸಚಿವಾಲಯದ ಅಧಿಸೂಚನೆಯ ಬಗ್ಗೆ ರಾಜ್ಯಸಭೆಗೆ ತಿಳಿಸಿತು. ಇಂದು ಮಧ್ಯಾಹ್ನ 12 ಗಂಟೆಗೆ ಪ್ರಶ್ನೋತ್ತರ ಅವಧಿಯಲ್ಲಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಘನಶ್ಯಾಮ್ ತಿವಾರಿ ಅವರು ಸದನಕ್ಕೆ ಅಧಿಸೂಚನೆಯನ್ನು ಓದಿದರು. ಭಾರತದ ಉಪರಾಷ್ಟ್ರಪತಿಗಳು ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ. 74 ವರ್ಷದ ಜಗದೀಪ್ ಧಂಖರ್ ಆಗಸ್ಟ್ 2022ರಲ್ಲಿ ಅಧಿಕಾರ ವಹಿಸಿಕೊಂಡರು.
ಧನಖರ್ ಕೊಡುಗೆ ಸ್ಮರಿಸಿದ ಮೋದಿ :
ಜಗದೀಪ್ ಧನಖರ್ ಅವರ ರಾಜೀನಾಮೆಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಖರ್ ಸಾರ್ವಜನಿಕ ಸೇವೆಗೆ ತಮ್ಮ ದೀರ್ಘಕಾಲದ ಬದ್ಧತೆಯನ್ನು ಎತ್ತಿ ತೋರಿಸಿದ್ದಾರೆ. ಅವರ ವೃತ್ತಿಜೀವನದುದ್ದಕ್ಕೂ ವಿವಿಧ ಹುದ್ದೆಗಳಲ್ಲಿ ನೀಡಿದ ಕೊಡುಗೆಗಳು ಶ್ಲಾಘನೀಯ. ಅವರಿಗೆ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕೋರುತ್ತೇನೆ ಎಂದು ಹೇಳಿದ್ದರು.

