ವಿಜಯಪುರ: ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ (59) ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ರಾಜು ತಾಳಿಕೋಟೆ ಚಿತ್ರಿಕರಣದಲ್ಲಿ ಭಾಗಿಯಾಗಿದ್ದರು. ಭಾನುವಾರ ರಾತ್ರಿ ಚಿತ್ರೀಕರಣ ಮುಗಿಸಿ ರಾತ್ರಿ 11:59 ರ ವೇಳೆಗೆ ವಿಶ್ರಾಂತಿಯಲ್ಲಿದ್ದಾಗ ಉಸಿರಾಟದ ಸಮಸ್ಯೆಯಾಗಿದೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಕರೆ ತರಲಾಗಿತ್ತು. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟೆ ನಗರದಲ್ಲಿ ವಾಸವಾಗಿದ್ದರು. ರಾಜು ತಾಳಿಕೋಟೆಯವರು ಮೊದಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟೆ. ಅವರು ಕೇವಲ ನಟನಾಗಿರದೇ ತಾಳಿಕೋಟೆಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು.
ಕುಡುಕನ ಪಾತ್ರಗಳಲ್ಲಿ ಮನೋಜ್ಞವಾಗಿ ಅಭಿನಯಿಸುತ್ತಿದ್ದ ಇವರ ʼಕಲಿಯುಗದ ಕುಡುಕ’, ‘ಕುಡುಕರ ಸಾಮ್ರಾಜ್ಯ’, ಮತ್ತು ‘ಅಸಲಿ ಕುಡುಕ’ ಬಹಳ ಫೇಮಸ್ ಆಗಿದ್ದವು. ಈ ನಾಟಕಗಳ ಆಡಿಯೋ ಕ್ಯಾಸೆಟ್ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿದ್ದವು.
ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಬಿಗ್ ಬಾಸ್ ಸೀಸನ್ 7ರಲ್ಲಿ ಅವರು ಸ್ಪರ್ಧಿಯಾಗಿ ಭಾಗವಹಿಸಿದ್ದರು.
ಅನಾರೋಗ್ಯ ಕಾರಣದಿಂದಾಗಿ ರಾಜು ತಾಳಿಕೋಟೆ ನಾಟಕ ಹಾಗೂ ಸಿನಿಮಾ ಚಟುವಟಿಕೆಗಳಿಂದ ದೂರ ಉಳಿದಿದ್ದರು. ರಾಜು ತಾಳಿಕೋಟೆಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.
ಶಿವರಾಜ ತಂಗಡಗಿ ಸಂತಾಪ
ಕನ್ನಡ ರಂಗಭೂಮಿಯ ಜನಪ್ರಿಯ ಕಲಾವಿದ ರಾಜು ತಾಳಿಕೋಟೆ ವರ ನಿಧನದ ಸುದ್ದಿ ತೀವ್ರ ಆಘಾತ ಉಂಟು ಮಾಡಿದೆ, ಅವರ ಈ ಅಕಾಲಿಕ ಸಾವು ಕನ್ನಡ ರಂಗಭೂಮಿ ಮತ್ತು ಚಲನಚಿತ್ರ ರಂಗಕ್ಕೆ ಆದ ಬಹುದೊಡ್ಡ ನಷ್ಟ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸಂತಾಪ ಸೂಚಿಸಿದ್ದಾರೆ.
ಪ್ರಸ್ತುತ ಅವರು ಧಾರವಾಡ ರಂಗಾಯಣದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನನ್ನೊಂದಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದ ರಾಜು ತಾಳಿಕೋಟೆ ಧಾರವಾಡ ರಂಗಾಯಣವನ್ನು ಹೊಸ ದೃಷ್ಟಿಕೋನದೊಂದಿಗೆ ಕಟ್ಟುತ್ತಾರೆ ಎಂಬ ಭರವಸೆ ಇತ್ತು. ಖಾಸ್ಗತೇಶ್ವರ ನಾಟಕ ಮಂಡಳಿ ಎಂಬ ಕಂಪನಿ ಹೊಂದಿದ್ದ ರಾಜು ತಾಳಿಕೋಟೆ ಅನೇಕ ಜನಪ್ರಿಯ ನಾಟಕಗಳ ಮೂಲಕ ಹೆಸರು ಮಾಡಿದ್ದರು. ಅವರು ನಟಿಸಿದ್ದ ಪಂಚರಂಗಿ, ಮನಸಾರೆ ಚಲನಚಿತ್ರಗಳು ಅವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟವು.ಇ

