ವಿಶಾಖಪಟ್ಟಣಂ, ಡಿ.29:ವಿಶಾಖಪಟ್ಟಣಂ–ದುವ್ವಾಡ ಮೂಲಕ ಎರ್ನಾಕುಲಂಗೆ ತೆರಳುತ್ತಿದ್ದ ಟಾಟಾನಗರ್–ಎರ್ನಾಕುಲಂ ಎಕ್ಸ್ಪ್ರೆಸ್ ರೈಲಿನ ಎರಡು ಭೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಮಧ್ಯರಾತ್ರಿ ನಡೆದಿದೆ. ಮಂಗಳವಾರ ರಾತ್ರಿ 12.45ರ ಸುಮಾರಿಗೆ ಈ ಭೀಕರ ದುರಂತ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ರೈಲಿನ ಪ್ಯಾಂಟ್ರಿ ಕಾರಿನ ಪಕ್ಕದಲ್ಲಿದ್ದ ಬಿ1 ಹಾಗೂ ಎಂ2 ಎಸಿ ಕೋಚ್ಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬಿ1 ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಎಂ2 ಬೋಗಿಯಲ್ಲಿ 76 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬೆಂಕಿಯನ್ನು ಗಮನಿಸಿದ ಲೋಕೋ ಪೈಲಟ್ಗಳು ತಕ್ಷಣವೇ ಎಲಮಂಚಿಲಿ ಸಮೀಪದ ರೈಲ್ವೆ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ತಲುಪುವ ಹೊತ್ತಿಗೆ ಎರಡು ಕೋಚ್ಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಅನಕಪಲ್ಲಿ, ಎಲಮಂಚಿಲಿ ಹಾಗೂ ನಕ್ಕಪಲ್ಲಿಯಿಂದ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರು.
ಬಿ1 ಬೋಗಿಯಲ್ಲಿದ್ದ ವಿಶಾಖಪಟ್ಟಣದ ನಿವಾಸಿ ಚಂದ್ರಶೇಖರ್ ಸುಂದರ್ (70) ಅವರು ಸಜೀವ ದಹನಗೊಂಡು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಇತರ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಸುಮಾರು ಎರಡು ಡಜನ್ ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಸುಮಾರು 2,000ಕ್ಕೂ ಹೆಚ್ಚು ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲೇ ಸಿಲುಕಿದರು.
ಈ ದುರಂತದಿಂದ ವಿಶಾಖಪಟ್ಟಣಂ–ವಿಜಯವಾಡ ಮಾರ್ಗದಲ್ಲಿ ಹಲವು ರೈಲುಗಳ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಬೆಳಗಿನ ಜಾವ 3.30ರ ನಂತರ ಪ್ರಯಾಣಿಕರನ್ನು ಗಮ್ಯಸ್ಥಾನಗಳಿಗೆ ಕರೆದೊಯ್ಯಲು ಪರ್ಯಾಯ ರೈಲು ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರದ ಮತ್ತೊಂದು ಬೆಂಕಿ ದುರಂತ
ಕಳೆದ ವಾರ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಚಿತ್ರದುರ್ಗದ ಬಳಿ ಬೆಂಕಿಗಾಹುತಿಯಾಗಿದ್ದ ಘಟನೆ ದೇಶವನ್ನೇ ಬೆಚ್ಚಿಬೀಳಿಸಿತ್ತು. ಆ ದುರಂತದಲ್ಲಿ 10 ಪ್ರಯಾಣಿಕರು ಸಜೀವ ದಹನಗೊಂಡು ಮೃತಪಟ್ಟಿದ್ದರು. ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಸಜೀವ ದಹನಗೊಂಡ ಮೃತದೇಹಗಳನ್ನು ಡಿಎನ್ಎ ವರದಿ ಆಧರಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಹುಬ್ಬಳ್ಳಿ ಎಫ್ಎಸ್ಎಲ್ ಪ್ರಯೋಗಾಲಯದಿಂದ ಫೊರೆನ್ಸಿಕ್ ವರದಿ ಶನಿವಾರ ಬೆಳಿಗ್ಗೆ ಲಭ್ಯವಾದ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಒಪ್ಪಿಸಲಾಗಿದೆ. ಆದರೆ ಲಾರಿ ಚಾಲಕ ಕುಲದೀಪ್ ಯಾದವ್ ಅವರ ಕುಟುಂಬಸ್ಥರು ಇನ್ನೂ ಮುಂದೆ ಬಾರದ ಹಿನ್ನೆಲೆಯಲ್ಲಿ, ಅವರ ಮೃತದೇಹ ಜಿಲ್ಲಾಸ್ಪತ್ರೆಯಲ್ಲಿಯೇ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

