ಬೆಂಗಳೂರು, ಜ.7: ನಗರದ ಬಾಗಲಗುಂಟೆ ಪ್ರದೇಶದ ಪ್ರಿನ್ಸ್ ಅಪಾರ್ಟ್ಮೆಂಟ್ನಲ್ಲಿ 16ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ.
ಮಂಗಳೂರು ಮೂಲದ ನಿಕ್ಷೇಪ್ ಬಂಗೇರಾ (26) ಮೃತ ಇಂಜಿನಿಯರಿಂಗ್ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನಿಕ್ಷೇಪ್ ಬಂಗೇರಾ ತನ್ನ ತಂದೆ-ತಾಯಿಯೊಂದಿಗೆ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದನು.
ವಿದೇಶದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪೂರ್ಣಗೊಳಿಸಿ ಇತ್ತೀಚೆಗೆ ಭಾರತಕ್ಕೆ ವಾಪಸಾಗಿದ್ದ ನಿಕ್ಷೇಪ್, ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ಈ ಕೃತ್ಯಕ್ಕೆ ಶರಣಾಗಿದ್ದಾನೆ ಎನ್ನಲಾಗಿದೆ. ಅನಾರೋಗ್ಯ ಹಾಗೂ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

