ನವದೆಹಲಿ: ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯನ್ನು ಅರೆಬೆತ್ತಲೆಯ ಸ್ಥಿತಿಯಲ್ಲಿ ಪೊಲೀಸ್ ವಾಹನದೊಳಗೆ ಎಳೆದೊಯ್ಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.
ಈ ಪ್ರಕರಣದ ಕುರಿತು ಕರ್ನಾಟಕ ರಾಜ್ಯದ ಡಿಜಿಪಿಗೆ ಪತ್ರ ಬರೆದಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ವಿಜಯಾ ರಹಟ್ಕರ್, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮಹಿಳೆಯ ವ್ಯಕ್ತಿತ್ವದ ಗೌರವ, ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಲಿಂಗ ಆಧಾರಿತ ಹಿಂಸೆಯಿಂದ ರಕ್ಷಣೆಯ ಹಕ್ಕಿನ ಮೇಲೆ ಇದು ಗಂಭೀರ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಫ್ಐಆರ್ ದಾಖಲಿಸದಿದ್ದಲ್ಲಿ ತಕ್ಷಣವೇ ದಾಖಲಿಸಬೇಕು. ಅಲ್ಲದೆ, ನ್ಯಾಯಸಮ್ಮತ, ನಿಷ್ಪಕ್ಷಪಾತ ಮತ್ತು ಸಮಯಬದ್ಧ ತನಿಖೆ ನಡೆಸಿ, ವೈರಲ್ ವೀಡಿಯೋ ಸೇರಿದಂತೆ ಎಲ್ಲ ಸಾಕ್ಷ್ಯಗಳನ್ನು ಸಮಗ್ರವಾಗಿ ಪರಿಶೀಲಿಸುವಂತೆ ಆಯೋಗ ಸೂಚಿಸಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಇಲಾಖಾತ್ಮಕ ಹಾಗೂ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದೆ.
ಇದಲ್ಲದೆ, ಸಂತ್ರಸ್ತ ಮಹಿಳೆಗೆ ಕಾನೂನುಬದ್ಧವಾಗಿ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ವಸತಿ ಹಾಗೂ ಪರಿಹಾರ ಒದಗಿಸುವಂತೆ ಆಯೋಗ ಸೂಚಿಸಿದ್ದು, ಕೈಗೊಳ್ಳಲಾದ ಕ್ರಮಗಳ ಕುರಿತು ವಿವರವಾದ ವರದಿಯನ್ನು ಐದು ದಿನಗಳೊಳಗೆ ಸಲ್ಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆಗೆ ಸೂಚಿಸಿದೆ.

