ಬೆಂಗಳೂರು : ಭಾರತಿನಗರ ನಾಗರಿಕರ ವೇದಿಕೆ ವತಿಯಿಂದ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಹಬ್ಬದ ಕಾರ್ಯಕ್ರಮಕ್ಕೆ ಚಿತ್ರನಟಿ ಶ್ರೀಮತಿ ತಾರಾ ಅನುರಾಧ ಹಾಗೂ ಶ್ರೀಮತಿ ಅನು ಪ್ರಭಾಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದರು.
ಸಮಾರಂಭದ ಅಧ್ಯಕ್ಷತೆಯನ್ನು ನಾಗರಿಕರ ವೇದಿಕೆಯ ಅಧ್ಯಕ್ಷ ಸುರೇಂದ್ರ ವಹಿಸಿದ್ದರು. ಸಂಕ್ರಾಂತಿ ಹಬ್ಬದ ಮಹತ್ವ, ಸಂಸ್ಕೃತಿ ಹಾಗೂ ಪರಂಪರೆಯ ಕುರಿತು ಅತಿಥಿಗಳು ಮಾತನಾಡಿ, ಹಬ್ಬಗಳು ಸಮಾಜದಲ್ಲಿ ಏಕತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಹಬ್ಬದ ಆಚರಣೆಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.

