ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆ/ನಿವೇಶನ ವಿತರಿಸುವಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಫಲಾನುಭವಿಗಳು ಇಂದು ಕರ್ನಾಟಕ ಗೃಹ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ನಿಗಮವು ಜನವರಿ 31ರೊಳಗಾಗಿ ಮನೆ ನೀಡುವುದಾಗಿ ಭರವಸೆ ನೀಡಿತ್ತು. ಈ ಕುರಿತು ಹಿಂದಿನ ಪ್ರತಿಭಟನೆಯ ವೇಳೆ ಅರ್ಜಿದಾರರಿಗೆ ಸಬ್ಸಿಡಿ, ಮಹಜರು ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಮನೆ ಹಸ್ತಾಂತರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಭರವಸೆ ನೀಡಿದ ದಿನಾಂಕ ದಾಟಿದರೂ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಫಲಾನುಭವಿಗಳು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಡೆದ ಪ್ರತಿಭಟನೆಯಲ್ಲಿ ಹಣ ಪಾವತಿ ಮಾಡಿರುವ ರಸೀದಿಗಳು, ಮನೆಗಾಗಿ ಸಲ್ಲಿಸಿರುವ ಅರ್ಜಿ ಹಾಗೂ ಇತರೆ ದಾಖಲೆಗಳನ್ನು ಕೈಯಲ್ಲಿ ಹಿಡಿದು ಫಲಾನುಭವಿಗಳು ಪ್ರತಿಭಟಿಸಿದರು. ಕೂಡಲೇ ಮನೆ ವಿತರಣೆ ಪ್ರಕ್ರಿಯೆ ಪೂರ್ಣಗೊಳಿಸಿ ಭರವಸೆಯನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

