ನವದೆಹಲಿ: ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂವರು ಶವಗಳು ಪತ್ತೆಯಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತರನ್ನು ಬಾಪ್ರೋಲಾ ನಿವಾಸಿಗಳಾದ ರಣಧೀರ್ ಸಿಂಗ್ (60), ಲಕ್ಷ್ಮೀ ದೇವಿ (40) ಹಾಗೂ ಶಿವ ನರೇಶ್ ಸಿಂಗ್ (47) ಎಂದು ಗುರುತಿಸಲಾಗಿದೆ. ಫ್ಲೈಓವರ್ ಮೇಲೆ ಕಾರು ಬಹಳ ಸಮಯದಿಂದ ನಿಂತಿದ್ದನ್ನು ಗಮನಿಸಿದ ಸಾರ್ವಜನಿಕರು ಅನುಮಾನಗೊಂಡು ಕಾರಿನ ಬಳಿ ತೆರಳಿ ಪರಿಶೀಲಿಸಿದಾಗ, ಒಳಗೆ ಮೂವರು ಅಚೇತನ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯಲ್ಲಿ ವಿಷ ಸೇವನೆಯಿಂದ ಮೃತಪಟ್ಟಿರುವ ಸಾಧ್ಯತೆ ಕಂಡುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

