ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಿಂದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂ. ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
ಕೆಲಸದ ನಿಮಿತ್ತ ಸಚಿವರ ಕಚೇರಿಗೆ ಬಂದಿದ್ದ ನವೀನ್ ಎಂಬವರು ತಮ್ಮ ಕೈಚೀಲವನ್ನು ಕಚೇರಿಯಲ್ಲೇ ಮರೆತು ಹೊರಟಿದ್ದರು. ಕೈಚೀಲದಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂ. ನಗದು ಇದ್ದುದಾಗಿ ತಿಳಿದುಬಂದಿದೆ. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.
ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ತೆಗೆದುಕೊಂಡು ಹೋಗಿರುವುದು ಪತ್ತೆಯಾಯಿತು.
ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ನೌಕರನನ್ನು ಬಂಧಿಸಿದ್ದು, ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ಮುಂದುವರಿದಿದೆ. ಇದೇ ವೇಳೆ ವಿಧಾನಸೌಧದ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳು ಕೂಡ ಎದ್ದಿವೆ.

