ಬೆಂಗಳೂರು, ಫೆ. 20: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ನಿರ್ಧಾರವನ್ನು ಖಂಡಿಸಿ ಇಂದು ವಿಧಾನಸೌಧ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳು ಮೌನ ಪ್ರತಿಭಟನೆ ನಡೆಸಿದರು.
ವಿಧಾನಸೌಧ–ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ ಸೇರಿದ್ದ ಪತ್ರಕರ್ತರು ಧರಣಿ ನಡೆಸಿ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರು.
ಕಪ್ಪು ಬಟ್ಟೆ ಧರಿಸಿ, ಮುಖಕ್ಕೆ ಕಪ್ಪು ಮಾಸ್ಕ್ ಹಾಕಿಕೊಂಡು ಮಾಧ್ಯಮ ಪ್ರತಿನಿಧಿಗಳು ಮೌನವಾಗಿ ಕುಳಿತು ಪ್ರತಿಭಟನೆ ನಡೆಸಿದರು. “ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆಯಾಗಿದೆ” ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.
ವಿಧಾನಸೌಧ ಪ್ರವೇಶಕ್ಕೆ ವಿಧಿಸಿರುವ ನಿಯಮಗಳು ಹಾಗೂ ನಿರ್ಬಂಧಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಅವರು ಘೋಷಣೆ ಕೂಗಿದರು. ಮಾಧ್ಯಮಗಳ ಮೇಲೆ ಹೇರಲಾಗಿರುವ ನಿರ್ಬಂಧವನ್ನು ತಕ್ಷಣವೇ ರದ್ದುಪಡಿಸಬೇಕು ಎಂಬುದು ಅವರ ಮುಖ್ಯ ಬೇಡಿಕೆಯಾಗಿತ್ತು.
ಪ್ರತಿಭಟನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸರ್ಕಾರವು ಈ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮ ಪ್ರತಿನಿಧಿಗಳು ಮನವಿ ಮಾಡಿದರು. ಈ ಸಂದರ್ಭದಲ್ಲಿ ಹಲವು ಹಿರಿಯ ಪತ್ರಕರ್ತರು ಹಾಗೂ ಮಾಧ್ಯಮ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

