ನವದೆಹಲಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿ ಮಹತ್ವದ ರಿಲೀಫ್ ನೀಡಿದೆ.
ಯೋಗೀಶ್ ಗೌಡರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್ನ ನ್ಯಾ. ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಇಂದು ಜಾಮೀನು ನೀಡುವಂತೆ ಆದೇಶ ಹೊರಡಿಸಿದೆ.
ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿದಾರ್ಥ್ ಲೂಥ್ರಾ ವಾದ ಮಂಡಿಸಿ, ಪ್ರಕರಣದ ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಸಾಕ್ಷ್ಯ ನಾಶವಾಗುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ಹೀಗಾಗಿ ವಿನಯ್ ಕುಲಕರ್ಣಿಗೂ ಜಾಮೀನು ನೀಡಬಹುದು ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಈ ಕುರಿತು ಪ್ರತಿಕ್ರಿಯಿಸಿದ ನ್ಯಾ. ಸಂಜಯ್ ಕರೋಲ್, ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದರೂ, ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡಿರುವ ಹಿನ್ನೆಲೆ ಜಾಮೀನು ನೀಡಲು ಅಡ್ಡಿಯಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ವಾದ–ಪ್ರತಿವಾದಗಳನ್ನು ಆಲಿಸಿದ ಬಳಿಕ ಪೀಠ ಜಾಮೀನು ಮಂಜೂರು ಮಾಡಿ, ಎರಡು ತಿಂಗಳೊಳಗೆ ವಿಚಾರಣೆ ಪ್ರಕ್ರಿಯೆ ಆರಂಭಿಸಲು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತು. ಇದಕ್ಕೆ ಸಿಬಿಐ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಇನ್ನೊಂದು ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಭಾಗಿಯಾಗಿರುವ ಹಿನ್ನೆಲೆ ಜಾಮೀನು ನೀಡಬಾರದು ಎಂದು ವಾದಿಸಿದರು.
ಆದಾಗ್ಯೂ, ಪೀಠವು ಈ ಪ್ರಕರಣದಲ್ಲಿ ಸಾಕ್ಷ್ಯ ಹಂತ ಮುಕ್ತಾಯಗೊಂಡಿರುವುದನ್ನು ಪರಿಗಣಿಸಿ ಜಾಮೀನು ನೀಡಲು ತೀರ್ಮಾನಿಸಿತು.
ಪ್ರಸ್ತುತ ಪ್ರಕರಣ ಅಂತಿಮ ಹಂತದಲ್ಲಿದ್ದು, ಆರೋಪಿಗಳ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ವಕೀಲರ ಅಂತಿಮ ವಾದ ಮಾತ್ರ ಬಾಕಿಯಿದೆ.
2016ರ ಜೂನ್ 15ರಂದು ಯೋಗೀಶ್ ಗೌಡರ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ ಬಳಿಕ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ತನಿಖೆಯ ವೇಳೆ ಶಾಸಕ ವಿನಯ್ ಕುಲಕರ್ಣಿ ಅವರನ್ನು ಆರೋಪಿಯನ್ನಾಗಿ ಪರಿಗಣಿಸಿ ಬಂಧಿಸಲಾಗಿತ್ತು.
ಈ ಹಿಂದೆ ಸುಪ್ರೀಂಕೋರ್ಟ್ ಜಾಮೀನು ರದ್ದುಪಡಿಸಿದ ಬಳಿಕ 2025ರ ಜೂನ್ 13ರಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿ ಇದ್ದರು. ಇದೀಗ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಬಿಡುಗಡೆಯ ದಾರಿ ಸುಗಮವಾಗಿದೆ.

