ಬೆಂಗಳೂರು | ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಈ ಮೂಲಕ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಪ್ರಮುಖ ಜನಪ್ರತಿನಿಧಿಗಳಲ್ಲಿ ವಿನಯ್ ಕುಲಕರ್ಣಿ ಎರಡನೇ ವ್ಯಕ್ತಿಯಾಗಿದ್ದಾರೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವುದು ಗಮನಾರ್ಹ. ನ್ಯಾಯಾಲಯದ ತೀರ್ಪಿನಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ತಕ್ಷಣದಿಂದಲೇ ಅನರ್ಹಗೊಂಡಿದೆ.
ನ್ಯಾಯಮೂರ್ತಿ ಸಂತೋಷ ಗಜನನ ಭಟ್ ಅವರು ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿ, ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ಸೆಕ್ಷನ್ 120(ಬಿ) (ಪಿತೂರಿ) ಅಡಿಯಲ್ಲಿ 7 ವರ್ಷ ಕಠಿಣ ಶಿಕ್ಷೆ ವಿಧಿಸಿದರು. ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಅನುಭವಿಸಬೇಕೆಂದು ಆದೇಶಿಸಲಾಗಿದೆ.
ಒಟ್ಟು 17 ಆರೋಪಿಗಳ ಪೈಕಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, 19ನೇ ಆರೋಪಿ ಚನ್ನಕೇಶವ ಟಿಂಗರಿಕರ್ಗೆ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಇನ್ನು ಎ1 ಬಸವರಾಜ ಮುತ್ತಗಿ ಅವರನ್ನು ಮಾಫಿ ಸಾಕ್ಷಿಯಾಗಿ ಕೋರ್ಟ್ ಪರಿಗಣಿಸಿದೆ. ಯೋಗೀಶ್ ಗೌಡ ಕುಟುಂಬಕ್ಕೆ ₹16 ಲಕ್ಷ ಪರಿಹಾರ ನೀಡಲು ನ್ಯಾಯಾಲಯ ಸೂಚಿಸಿದೆ.
ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಸಾಕ್ಷಿಗಳಾಗಿ ಪರಿವರ್ತಿಸಲಾಗಿದ್ದು, ಅವರಲ್ಲಿ ಒಬ್ಬರಾದ ಶಿವಾನಂದ ಬಿರಾದರ್ ನಂತರ ಪ್ರತಿಕೂಲ ಸಾಕ್ಷಿಯಾಗಿ ಬದಲಾಗಿರುವ ಹಿನ್ನೆಲೆಯಲ್ಲಿ ಮತ್ತೆ ಆರೋಪಿಯಾಗಿ ಸೇರಿಸಲು ಸಿಬಿಐ ಅರ್ಜಿ ಸಲ್ಲಿಸಿದೆ.
20ನೇ ಆರೋಪಿ ವಾಸುದೇವ ನಿಲೇಕಣಿ ಮತ್ತು 21ನೇ ಆರೋಪಿ ಸೋಮಶೇಖರ ಅವರಿಗೆ ಅನುಮಾನದ ಲಾಭ ನೀಡಿ ಖುಲಾಸೆ ಮಾಡಲಾಗಿದೆ. ತೀರ್ಪು ಹೊರಬಿದ್ದ ತಕ್ಷಣ ನ್ಯಾಯಾಲಯದ ಕಟಕಟೆಯಲ್ಲಿ ನಿಂತಿದ್ದ ಆರೋಪಿಗಳು ಭಾವುಕರಾದ ದೃಶ್ಯ ಕಂಡುಬಂದಿತು. ಬಳಿಕ ಸಿಬಿಐ ಅಧಿಕಾರಿಗಳು ಕಠಿಣ ಭದ್ರತೆಯಲ್ಲಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದರು.
ನ್ಯಾಯಾಲಯವು ಸುಳ್ಳು ಸಾಕ್ಷಿ ನೀಡಿದ ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಸ್ವತಂತ್ರ ಸಾಕ್ಷಿಗಳ ವಿರುದ್ಧ ಸಿಆರ್ಪಿಸಿ ಸೆಕ್ಷನ್ 340 ಅಡಿಯಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದೆ.
2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿ ಯೋಗೀಶ್ ಗೌಡ ಹತ್ಯೆ ನಡೆದಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದರೂ, ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಯಿತು. ರಾಜಕೀಯ ವೈಮನಸ್ಸು ಮತ್ತು ಪ್ರಭಾವದ ಹಿನ್ನೆಲೆ ಈ ಹತ್ಯೆ ನಡೆದಿರುವುದಾಗಿ ತನಿಖೆಯಲ್ಲಿ ಬಹಿರಂಗವಾಯಿತು.
2020ರಲ್ಲಿ ಸಿಬಿಐ ವಿನಯ್ ಕುಲಕರ್ಣಿಯನ್ನು ಬಂಧಿಸಿತ್ತು. 2021ರಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದರೂ, 2025ರಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಪ್ರಯತ್ನದ ಆರೋಪದ ಹಿನ್ನೆಲೆಯಲ್ಲಿ ಜಾಮೀನು ರದ್ದು ಮಾಡಲಾಗಿತ್ತು.
ಬಿಜೆಪಿ ಜಿಪಂ ಸದಸ್ಯರಾಗಿದ್ದ ಯೋಗೀಶ್ ಗೌಡ ರಾಜಕೀಯವಾಗಿ ವೇಗವಾಗಿ ಬೆಳೆಯುತ್ತಿದ್ದರು. ಇದರಿಂದ ರಾಜಕೀಯ ವೈಮನಸ್ಸು ಉಂಟಾಗಿ, 2016ರಲ್ಲಿ ಜಿಮ್ನಲ್ಲಿ ಅವರ ಹತ್ಯೆ ನಡೆದಿತ್ತು ಎಂದು ಆರೋಪಿಸಲಾಗಿದೆ.
ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಈಗ ನ್ಯಾಯಾಲಯದ ತೀರ್ಪಿನಿಂದ ಬಹು ವರ್ಷಗಳ ಬಳಿಕ ಅಂತಿಮ ಘಟ್ಟ ತಲುಪಿದೆ.

