ನವದೆಹಲಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ -ಜೆಡಿಎಸ್ನ ಸಂಸದರು ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಕೈಯಲ್ಲಿ ಫಲಕಗಳನ್ನಿಡಿದಿದ್ದ ಸಂಸದರು ಸಿದ್ದರಾಮಯ್ಯ ಕುಟುಂಬದವರು ಕಾನೂನು ಬಾಹಿರವಾಗಿ ನಿವೇಶನ ಪಡೆದುಕೊಂಡಿದ್ದಾರೆ. ತಪ್ಪಿತಸ್ಥ ಸ್ಥಾನದಲ್ಲಿರುವ ಅವರು ಅಧಿಕಾರದಲ್ಲಿ ಮುಂದುವರೆಯಬಾರದು. ತಕ್ಷಣವೇ ರಾಜ್ಯ ಸರ್ಕಾರ ಸಿಬಿಐಗೆ ಪ್ರಕರಣವನ್ನು ಹಸ್ತಾಂತರ ಮಾಡಬೇಕೆಂದು ಒತ್ತಾಯಿಸಿದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ನೇರವಾಗಿ ಶಾಮೀಲಾಗಿದ್ದು, ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇದು ನಾಲ್ಕು ಸಾವಿರ ಕೋಟಿ ಹಗರಣವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಶಾಮೀಲಾಗಿದೆ ಎಂದು ಪ್ರಸಂಸದರು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಬಿ.ವೈ.ರಾಘವೇಂದ್ರ, ಮಲ್ಲೇಶ್ ಬಾಬು, ಜಗದೀಶ್ ಶೆಟ್ಟರ್, ಜಗ್ಗೇಶ್ ಸೇರಿದಂತೆ ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಜಂಟಿಯಾಗಿ ಪ್ರತಿಭಟನೆ ನಡೆಸಿದರು.

