ಚಿಕ್ಕಮಗಳೂರು, ಫೆ.16: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆ ಸಮೀಪದ ಹೊನ್ನಗುಂಡಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ತಾಯಿ ಬೈದಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಸುಪ್ರಿತಾ (12) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಆಕೆ 7ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಊಟ ಮಾಡುವಾಗ ಟಿವಿ ನೋಡುತ್ತಿದ್ದಳು ಎನ್ನಲಾಗಿದೆ. ಈ ವೇಳೆ ಆಕೆಯ ಕೈಯಿಂದ ಊಟದ ತಟ್ಟೆ ಜಾರಿ ಬಿದ್ದಿದೆ.
“ಊಟ ಮಾಡುವಾಗಲೂ ಟಿವಿ ನೋಡ್ತೀಯ, ಟಿವಿ ನೋಡುವುದನ್ನ ಕಡಿಮೆ ಮಾಡು” ಎಂದು ತಾಯಿ ಸರೋಜಾ ಗದರಿಸಿದ್ದಾಗಿ ತಿಳಿದುಬಂದಿದೆ. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ವೇಲ್ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ತಾಯಿ ಕೆಲಸಕ್ಕೆ ತೆರಳಿ ವಾಪಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬಸ್ಥರು ಮಾಹಿತಿ ನೀಡಿದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತದೇಹವನ್ನು ಜಯಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಪ್ರಕರಣ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

