ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕಿಡಿಹೊತ್ತಿರುವ ವಕ್ಫ್ಬೋರ್ಡ್ ನೋಟಿಸ್ ವಿವಾದಕ್ಕೆ ಸಂಬಂಧಿಸಿ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಂತಾಗಿದೆ. 2019 ರಿಂದ 2022ರವರೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಮಂಡಳಿ ಮೂಲಕ ನೋಟಿಸ್ ಕೊಡಲಾಗಿತ್ತು ಎಂದು ಸಚಿವ ಎಂ.ಬಿ. ಪಾಟೀಲ್ ಗಂಭೀರ ಆರೋಪ ಮಾಡಿದರು.
ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಕೆಟ್ಟ ರಾಜಕಾರಣ ಮಾಡುತ್ತಿದ್ದು, ಆಗ ಇರದ ಹಿಂದೂಗಳ ಮೇಲಿನ ಪ್ರೇಮವನ್ನು ಈಗ ಸುಳ್ಳು ಆರೋಪ ಮಾಡುವ ಮೂಲಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಕುಟುಕಿದರು.
ಬಿಜೆಪಿಯವರಿಗೆ ಅಧಿಕಾರವಿದ್ದಾಗ ಅಭಿವೃದ್ಧಿ ಕೆಲಸಗಳನ್ನು ಮಾಡದೇ, ಹಲಾಲ್, ಹಿಜಾಬ್, ಉರಿಗೌಡ-ನಂಜೇಗೌಡ ಎಂದು ನಾಟಕವಾಡಿದ್ದರು. ಈಗ ವಕ್ಫ್ ಆಸ್ತಿ ಹೆಸರಿನಲ್ಲಿ ಹೊಸ ನಾಟಕ ಶುರು ಮಾಡಿದ್ದಾರೆ. ಸಳ್ಳನ್ನು ಹೇಳಿ ಜನರ ಕಣ್ಣಿಗೆ ಮಣ್ಣೆ ಎರಚುವ ಕುತಂತ್ರ ನಡೆಯಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯವರು ತಮ್ಮ ನಡುವಿನ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳಲಿ. ಅಲ್ಲದೇ ಅವರ ಆಡಳಿತದ ಅವಧಿಯಲ್ಲಿ ರೈತರಿಗೆ ಕೊಟ್ಟ ನೋಟಿಸ್ಗಳಿಗೆ ಉತ್ತರ ಕೊಡಲಿ. ಇಲ್ಲದ ಸಮಸ್ಯೆಯನ್ನು ಹುಟ್ಟುಹಾಕುವುದು ಬಿಟ್ಟು ನಮ್ಮ ಪ್ರಶ್ನೆಗೆ ಉತ್ತರಿಸಲಿ ಎಂದು ಆಗ್ರಹಿಸಿದರು.

