ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಕೊಲೆ ಯತ್ನ, ಸುಪಾರಿ ಆರೋಪಿಸಿ ಮಾಜಿ ಕಾರ್ಪೊರೇಟರ್ ಮಂಜುಳಾ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಹಾಗೂ ಕೆಲವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಇದೇ ದಿನವೇ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಹೀಗಾಗಿ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಗುತ್ತಿಗೆದಾರ ವೇಲು ನಾಯ್ಕರ್ ನೀಡಿದ್ದ ದೂರಿನನ್ವಯ ಸೆಪ್ಟೆಂಬರ್ 13ರಂದು ಮುನಿರತ್ನ ಅವರ ವಿರುದ್ಧ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನ ಸಿಐಡಿಯ ವಿಶೇಷ ತನಿಖಾ ತಂಡಕ್ಕೆ ವರ್ಗಾವಣೆಗೊಳಿಸಿ ಆದೇಶಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಐಡಿಯ ಎಸ್ಐಟಿ ತಂಡ ಒಟ್ಟು 53 ಸಾಕ್ಷಿಗಳನ್ನು ವಿಚಾರಣೆ ನಡೆಸಿ ಮುನಿರತ್ನ ಅವರ ವಿರುದ್ಧ 157 ದಾಖಲೆಗಳನ್ನೊಳಗೊಡ 590 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.
ಆ ಪೈಕಿ ಮೂವರು ಪ್ರತ್ಯಕ್ಷದರ್ಶಿ ಸಾಕ್ಷಿದಾರರು ನ್ಯಾಯಾಧೀಶರ ಮುಂದೆ ಹೇಳಿಕೆಯನ್ನು ನೀಡಿದ್ದಾರೆ. ಜಾತಿನಿಂದನೆ ಮಾಡಿರುವ ಬಗ್ಗೆ ದೂರುದಾರ ವೇಲು ನಾಯ್ಕರ್ ಸಲ್ಲಿಸಿದ್ದ ಆಡಿಯೋ ಕ್ಲಿಪ್ ಹಾಗೂ ಮುನಿರತ್ನ ಅವರ ಧ್ವನಿ ಮಾದರಿಯನ್ನು ಎಫ್ಎಸ್ಎಲ್ಗೆ ರವಾನಿಸಿ ತಜ್ಞರಿಂದ ವರದಿ ಪಡೆಯಲಾಗಿದೆ. ಆರೋಪಿಯ ಧ್ವನಿ ಮಾದರಿ ಹಾಗೂ ಫೋನ್ ಸಂಭಾಷಣೆ ಕ್ಲಿಪ್ನಲ್ಲಿರುವ ಧ್ವನಿಗೆ ಹೋಲಿಕೆಯಾಗಿರುವುದು ಎಫ್ಎಸ್ಎಲ್ ತಜ್ಞರ ವರದಿಯಿಂದ ದೃಢಪಟ್ಟಿದೆ.

