ನವದೆಹಲಿ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಭಾನುವಾರ ಮುಂಜಾನೆ ಅಮೆರಿಕದಿಂದ ಭಾರತಕ್ಕೆ ಬಂದಿಳಿದಿದ್ದಾರೆ.ನವದೆಹಲಿ ವಿಮಾನ ನಿಲ್ದಾಣ ತಲುಪಿದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ವಿದ್ಯಾರ್ಥಿಗಳ ಗುಂಪು ಶುಭಾಂಶು ಅವರಿಗೆ ಭವ್ಯ ಸ್ವಾಗತ ಕೋರಿದರು.
ಶುಭಾಂಶು ಶುಕ್ಲಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದಾದ ನಂತರ ಅವರು ಲಕ್ನೋಗೆ ಹೋಗಲಿದ್ದಾರೆ. ಭಾರತದ ಗಗನಯಾನ ಮಿಷನ್ಗೆ ಆಯ್ಕೆಯಾದ ಮತ್ತೊಬ್ಬ ಗಗನಯಾತ್ರಿ ಶುಭಾಂಶು ಜೊತೆಗೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಭಾರತಕ್ಕೆ ಮರಳಿದ್ದಾರೆ.
ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಜೂನ್ 25 ರಂದು ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಹೊರಟು ಜೂನ್ 26 ರಂದು ISS ನೊಂದಿಗೆ ಸಂಪರ್ಕ ಸಾಧಿಸಿದ ನಾಸಾದ ಆಕ್ಸಿಯಮ್ -4 ಖಾಸಗಿ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದರು.
ಅವರು, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ನ ಸ್ಲಾವೋಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಹಂಗೇರಿಯ ಟಿಬೋರ್ ಕಾಪು ಅವರೊಂದಿಗೆ 18 ದಿನಗಳ ಕಾರ್ಯಾಚರಣೆಯಲ್ಲಿ 60 ಕ್ಕೂ ಹೆಚ್ಚು ಪ್ರಯೋಗಗಳು ಮತ್ತು 20 ಸಾರ್ವಜನಿಕ ಸಂಪರ್ಕ ಅವಧಿಗಳನ್ನು ನಡೆಸಿದರು. ಜುಲೈ 15 ರಂದು ಶುಭಾಂಶು ಭೂಮಿಗೆ ಮರಳಿದ್ದರು.
ಪ್ರಧಾನಿ ಮೋದಿ ಭೇಟಿ
ಭಾರತಕ್ಕೆ ಮರಳಿರುವ ಗ್ರೂಪ್ ಕ್ಯಾಪ್ಟನ್ ಶುಕ್ಲಾ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಅಲ್ಲದೆ, ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ನಮ್ಮ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಬಾಹ್ಯಾಕಾಶ ಕೇಂದ್ರದಿಂದ ಹಿಂತಿರುಗಿದ್ದಾರೆ. ಮುಂಬರುವ ದಿನಗಳಲ್ಲಿ ಅವರು ಭಾರತಕ್ಕೆ ಹಿಂತಿರುಗುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಕೆಂಪು ಕೋಟೆಯಲ್ಲಿ ಮಾಡಿದ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಭಾರತದ ಸ್ವಂತ ಬಾಹ್ಯಾಕಾಶ ಕೇಂದ್ರದ ಯೋಜನೆಗಳ ಬಗ್ಗೆ ಮಾತನಾಡುತ್ತಾ ಹೇಳಿದರು.
ಆಕ್ಸಿಯಮ್-4 ಮಿಷನ್
ಅಂದಹಾಗೆ, ಐತಿಹಾಸಿಕ ಬಾಹ್ಯಾಕಾಶ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 15ರಂದು ಭೂಮಿಗೆ ಬಂದಿಳಿದರು. ಆಕ್ಸಿಯಮ್-4 ಸಿಬ್ಬಂದಿಯನ್ನು ಹೊತ್ತ ಸ್ಪೇಷ್ ಎಕ್ಸ್ ಗ್ರೇಸ್ ಕ್ಪಾಪ್ಸುಲ್ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಯಶಸ್ವಿಯಾಗಿ ಇಳಿಯಿತು.

