ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ “ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ’ (ಕೆಎಸ್ಸಿಎ) ಕಾರ್ಯದರ್ಶಿ ಎ.ಶಂಕರ್ ಹಾಗೂ ಖಜಾಂಚಿ ಇ.ಎಸ್. ಜೈರಾಮ್ ಅವರು ತಮ್ಮ ಹುದ್ದೆಗಳಿಗೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಈ ಇಬ್ಬರು. ‘ಕಳೆದೆರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಹಾಗೂ ದುರದೃಷ್ಟಕರ ಘಟನೆಯಲ್ಲಿ ತಮ್ಮ ಪಾತ್ರ ಸೀಮಿತವಾಗಿದ್ದರೂ, ನೈತಿಕ ಹೊಣೆ ಹೊತ್ತು ನಾವು ಕೆಎಸಿಎ ಕಾರ್ಯದರ್ಶಿ ಹಾಗೂ ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ.
ಈ ಕುರಿತು ಸಂಸ್ಥೆಯ ಅಧ್ಯಕ್ಷರಿಗೆ ಶನಿವಾರ (2025ರ ಜೂನ್ 6ರಂದು) ರಾತ್ರಿ ಪತ್ರ ಬರೆದಿದ್ದೇವೆ ಎಂದು ತಿಳಿಸಲು ಬಯಸುತ್ತೇವೆ’ ಎಂದು ಉಲ್ಲೇಖಿಸಿದ್ದಾರೆ.
ಅಭಿಮಾನಿಗಳು ಕ್ರೀಡಾಂಗಣದ ಬಳಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಕಾಲ್ತುಳಿತ ಉಂಟಾಗಿತ್ತು. ಈ ವೇಳೆ 11 ಮಂದಿ ಮೃತಪಟ್ಟು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ದುರಂತಕ್ಕೆ ಸರ್ಕಾರ, ಕೆಎಸ್ಸಿಎ, ಆರ್ಸಿಬಿ ಫ್ರಾಂಚೈಸ್ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ.

