ಅಥಣಿ (ಬೆಳಗಾವಿ): ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನೇದಿನೇ ಹೆಚ್ಚುತ್ತಿದ್ದು, ಇದರ ಪರಿಣಾಮವಾಗಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಬೈಕ್ ಸವಾರನಿಗೆ ಬೀದಿ ನಾಯಿಗಳು ಬೆನ್ನು ಹತ್ತಿದ ಹಿನ್ನೆಲೆಯಲ್ಲಿ ಗಾಬರಿಗೊಂಡ ಸವಾರ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಬೈಕ್ ಗುದ್ದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಥಣಿ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ನಡೆದಿದೆ.
ಮೃತಪಟ್ಟ ದುರ್ದೈವಿಯನ್ನು ವಿಶ್ವನಾಥ ಶಿರೋಳ (44) ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಬೈಕ್ ಸವಾರನನ್ನು ನಾಯಿಗಳು ಹಿಂಬಾಲಿಸುತ್ತಿದ್ದ ದೃಶ್ಯಗಳು ಕಂಡುಬಂದಿವೆ.
ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಉಪಟಳ ಮಿತಿ ಮೀರಿದ್ದು, ಬೈಕ್ ಸವಾರರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಕುರಿತು ಪುರಸಭೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.
ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಕೂಡಲೇ ಹಸ್ತಕ್ಷೇಪ ಮಾಡಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

