ಬೆಂಗಳೂರು : ಸರ್ಕಾರ ಮತ್ತು ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳನ್ನ ನಿಯಮಗಳ ಹೆಸರಿನಲ್ಲಿ ಹಿಂಸೆ ಮಾಡುತ್ತಿವೆ ಎಂದು ಆರೋಪಿಸಿ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ಹೋರಾಟ ನಡೆಸುವ ಘೋಷಣೆ ಮಾಡಿವೆ. ಆ.15 ರಂದು ಖಾಸಗಿ ಶಾಲೆಗಳಲ್ಲಿ ಕರಾಳ ಸ್ವಾತಂತ್ರ್ಯ ದಿನಾಚರಣೆ ಮಾಡುತ್ತೇವೆ ಎಂದು ಘೋಷಣೆ ಮಾಡಿವೆ.
ಶಾಲಾ ಶಿಕ್ಷಣ ಇಲಾಖೆಯಲ್ಲಿ ನೆಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಿನ ಅನ್ಯಾಯವನ್ನು ವಿರೋಧಿಸಿ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ಕರೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.
ಈ ಕುರಿತು ಇಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೇಪಾಕ್ಷಿ ಹಾಲನೂರು ಅವರ ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಕೆ ಮಡುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟು ಮುಂದಿನ 15 ದಿನ ಕಾಲಾವಕಾಶವನ್ನು ನೀಡಲಾಗಿದೆ.
ಆಗಸ್ಟ್ 21 ರಿಂದ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಎಚ್ಚರಿಕೆ ನೀಡಿದೆ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ 15 ದಿನ ಗಡುವು ನೀಡಿ ಎಚ್ಚರಿಸಲಾಗಿದೆ.
ಅನುದಾನ ರಹಿತ ಖಾಸಗಿ ಶಾಲೆಗಳ ನವೀಕರಣಕ್ಕೆ ವಿಧಿಸಿದ ಷರತ್ತುಗಳಲ್ಲಿರುವ ಗೊಂದಲಗಳನ್ನು ಸರಿಪಡಿಸುವ ಬಗ್ಗೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ. ಕಾಲಾವಕಾಶ ನೀಡಿದ 15 ದಿನಗಳೊಳಗೆ ಬೇಡಿಕೆ ಈಡೇರಿಸದಿದ್ದರೆ ಆಗಸ್ಟ್ 21ರಿಂದ ರಾಜ್ಯಾದ್ಯಂತ ಖಾಸಗಿ ಅನುದಾನ ರಹಿತ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಹೇಳಲಾಗಿದೆ.
ರುಪ್ಸಾ ಅಧ್ಯಕ್ಷ ಡಾ. ಹಾಲನೂರು ಲೇಪಾಕ್ಷಿ ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದು, ಖಾಸಗಿ ಶಾಲೆಗಳ ಅಭಿವೃದ್ಧಿಯನ್ನು ಶಾಲಾ ಶಿಕ್ಷಣ ಇಲಾಖೆ ಕಡೆಗಣಿಸುತ್ತಿರುವುದು ಕಾರಣವಾಗಿದೆ. ಖಾಸಗಿ ಶಾಲೆಗಳನ್ನು ನವೀಕರಣಕ್ಕೆ ಶಿಕ್ಷಣ ಇಲಾಖೆ ನಿಗದಿಪಡಿಸಿದ 64 ಅಂಶಗಳು ಅವೈಜ್ಞಾನಿಕವಾಗಿವೆ. ಕೂಡಲೇ ಷರತ್ತುಗಳನ್ನು ಸರಳೀಕರಣಗೊಳಿಸಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ ಒತ್ತಾಯಿಸಿದ್ದಾರೆ.