ಬೆಂಗಳೂರು ಕೋವಿಡ್ ಭ್ರಷ್ಟಾಚಾರದ ಕುರಿತು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದ ಆಯೋಗದ ವರದಿಯ ಆಧಾರದ ಮೇಲೆ ಮುಂದುವರೆದ ಕ್ರಮಗಳನ್ನು ತೆಗೆದುಕೊಳ್ಳಲು ವಿಶೇಷ ತನಿಖಾ ತಂಡವೊಂದನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ಈ ವಿಷಯ ತಿಳಿಸಿದರು.
ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ ಕೋವಿಡ್ ಭ್ರಷ್ಟಾಚಾರದಕುರಿತು ಸತ್ಯ ಶೋಧನೆಗಾಗಿ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ ಕಾರ್ಯ ಅವಧಿಯಲ್ಲಿ ತನಖೆ ನಡೆಸಿ 2 ಮಧ್ಯಂತರ ವರದಿಗಳನ್ನು ನೀಡಿ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು, ಎಳೆ ಎಳೆಯಾಗಿ ಬಿಡಿಸಿಟ್ಟಿದೆ.
ಈ ಬ್ರಹ್ಮಾಂಡ ಭ್ರಷ್ಟಾಚಾರ, ಜನರ ಜೀವಗಳ ಜೊತೆ ಚೆಲ್ಲಾಟವಾಡಿದ ಅಮಾನವೀಯ ಘಟನೆಗಳ ಬಗ್ಗೆ ಸತ್ಯ ಸಂಶೋಧನೆ ನಡೆಸಿರುವ ಆಯೋಗದ ವರದಿಯ ಬಗ್ಗೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಎಸ್.ಐ.ಟಿ.ರಚನೆಗೆ ತೀರ್ಮಾನಿಸಲಾಗಿದೆ ಎಂದರು.ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ತನಿಖಾ ವರದಿಯ ನಂತರ ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಅಧಿಕಾರಿಗಳು, ಅಧಿಕಾರಸ್ಥ ರಾಜಕಾರಣಿಗಳ ಅಪವಿತ್ರ ಮೈತ್ರಿಯ ಫಲವಾಗಿ ನಡೆದ ಭ್ರಷ್ಟಾಚಾರ, ಹಗರಣಗಳ ಕುರಿತು ಸತ್ಯಾಂಶಗಳು ಲಭ್ಯವಾಗಿದ್ದವು ಎಂದು ಅವರು ವಿವರಿಸಿದರು.
ಕೋವಿಡ್- 19 ರ ಕಾರಣಗಳಿಂದ ಜಗತ್ತಿನಲ್ಲಿ ದೊಡ್ಡ ಅಲ್ಲೋಲ-ಕಲ್ಲೋಲವಾಯಿತು. ಆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದುರಂತವನ್ನು ಅನುಭವಿಸಿತು. ಜನರ ರಕ್ಷಣೆ ಮಾಡಬೇಕಾದಂತಹ ಸಂದರ್ಭದಲ್ಲಿ ಭ್ರಷ್ಟಾಚಾರ, ಬೇಜವಾಬ್ದಾರಿ, ಜನರಿಗೆ ಮೋಸ ವಿಷಯಗಳ ಮಾಹಿತಿಗಳನ್ನು ಬಚ್ಚಿಟ್ಟುಕೊಳ್ಳುವ ಮತ್ತು ಸರ್ಕಾರದ ದಾಖಲೆಗಳು ಸಾರ್ವಜನಿಕರ ಪರಿಶೀಲನೆಗೆ ಲಭ್ಯವಾಗದಂತೆ ಮಾಡುವುದು ಮುಂತಾದವುಗಳನ್ನು ಅಂದಿನ ಸರ್ಕಾರ ಕೈಗೊಂಡಿತ್ತು. ಸಾರ್ವಜನಿಕರ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಗಳ ಕಾರ್ಯನಿರ್ವಹಣೆಗೆ ಅಡ್ಡಿಯುಂಟು ಮಾಡಿದ ಮಹತ್ವದ ಘಟನೆಗಳು ನಡೆದು ಹೋದವು ಎಂದು ಅವರು ಹೇಳಿದರು.
ಶಾಸನಬದ್ಧ ಸಮಿತಿಗಳ ಕಾರ್ಯನಿರ್ವಹಣೆಯನ್ನು ಅಸಾಧ್ಯವೆನ್ನುವ ರೀತಿಯಲ್ಲಿ ವಾತಾವರಣ ನಿರ್ಮಾಣ ಮಾಡಲಾಯಿತು ಮತ್ತು ಕಡಿವಾಣ ಹಾಕಲಾಗಿತ್ತು. ಸಮಿತಿಗಳ ಕಾರ್ಯನಿರ್ವಹಣೆಯನ್ನು ತಡೆದು ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು.ಕೋರೋನಾ ಸಂದರ್ಭದಲ್ಲಿ 330 ರಿಂದ 400 ರೂ ಗಳಿಗೆ ಲಭ್ಯವಿದ್ದ ಪಿಪಿಇ ಕಿಟ್ ಗಳನ್ನು 2117 ರೂ.ಗೆ ಖರೀದಿಸಲಾಯಿತು. 3 ಲಕ್ಷ ಕಿಟ್ ಖರಿದಿಸಲಾಯಿತು. ಆಮದು ಸಾಗಣೆ ವೆಚ್ಚ ನೀಡಿ ಅನುಮಾನಾಸ್ಪದ ವೆಚ್ಚ ಮಾಡಲಾಯಿತು. ಚೀನಾ ಕಂಪನಿಗಳಿಗೆ ಲಾಭ ಮಾಡಿಕೊಡಲಾಯಿತು. ಒಂದೇ ದಿನ ಎರಡು ದರಗಳಲ್ಲಿ 2117.53 ಹಾಗು 2104 ರೂ ಗೆ ಖರೀದಿ ಮಾಡಲಾಯಿತು. ಅದೇ ದಿನ 2049 ರೂ ಗಳಂತೆ ಇನ್ನೊಂದು ಕಂಪನಿಯಿಂದ ಖರೀದಿಸಲಾಯಿತು ಎಂದರು.
ನ್ಯಾ. ಮೈಕಲ್ ಡಿ ಕುನ್ಹಾ ಅವರು ಸಲ್ಲಿಸಿದ್ದ ಮಧ್ಯಂತರ ವರದಿಯಲ್ಲಿ ಅಕ್ರಮದ ಉಲ್ಲೇಖವಾಗಿದ್ದು, ನಿಯಮ ಬಾಹಿರವಾಗಿ ಖಾಸಗಿ ಲ್ಯಾಬ್ಗಳಿಗೆ 6.93 ಕೋಟಿ ರೂ. ಸಂದಾಯದ ಪ್ರಸ್ತಾಪ, ಖಾಸಗಿ ಲ್ಯಾಬ್ಗಳಿಗೆ ನಿಯಮ ಬಾಹಿರವಾಗಿ ಹಣ ಸಂದಾಯವಾದ ಆರೋಪ, ಐಸಿಎಂಆರ್ ಮಾನ್ಯತೆ ಇಲ್ಲದ ಲ್ಯಾಬ್ಗಳಿಗೆ ಹಣ ಸಂದಾಯ ಮಾಡಿದ ಉಲ್ಲೇಖ, ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಹಣ ಸಂದಾಯ ಮಾಡಿರುವುದಕ್ಕೆ ಆಕ್ಷೇಪ, 8 ಲ್ಯಾಬ್ಗಳಿಗೆ 4 ಕೋಟಿ 28 ಲಕ್ಷ ರೂ.ಸಂದಾಯ ಮಾಡಲಾಗಿದೆ ಅಂತ ವರದಿಯಲ್ಲಿ ಪ್ರಸ್ತಾಪವಾಗಿದೆ.
ಒಪ್ಪಂದ ಮಾಡಿಕೊಳ್ಳದೆ ಲ್ಯಾಬ್ಗಳಿಗೆ ಬೇಕಾಬಿಟ್ಟಿ ಹಣ ಸಂದಾಯ ಮಾಡಿರುವುದಕ್ಕೆ ಆಯೋಗವು, ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ.ಪ್ರಚಾರಕ್ಕಾಗಿ ಇಟ್ಟಿದ್ದ 7 ಕೋಟಿ 3 ಲಕ್ಷ ಹಣದಲ್ಲೂ ಸಾಕಷ್ಟು ಅಕ್ರಮ ನಡೆದಿರುವ ಬಗ್ಗೆ ಉಲ್ಲೇಖವಾಗಿದೆ. ಚುಕ್ಕಿ ಟಾಕೀಸ್ ಎಂಬ ಸಂಸ್ಥೆಗೆ 8 ಲಕ್ಷ 85 ಸಾವಿರ ನಿಯಮ ಬಾಹಿರವಾಗಿ ಪಾವತಿಸಲಾಗಿದೆ. ಕೆಲವು ಏಜೆನ್ಸಿಗಳಿಗೆ ಹಣ ಪಾವತಿಸಿದ್ದ ಬಗ್ಗೆ ದಾಖಲೆಯೇ ಇಡದ ಆರೋಗ್ಯ ಇಲಾಖೆ 5 ಕೋಟಿ ರೂ. ಹಣದ ಬಗ್ಗೆ ದಾಖಲೆ ಒದಗಿಸಲಿಲ್ಲ ಎಂದು ಅವರು ಹೇಳಿದರು.
ಸಾವಿನ ಬಗ್ಗೆ ಸರಿಯಾಗಿ ಲೆಕ್ಕ ಕೊಡದೇ ಸಾವಿನ ಲೆಕ್ಕ ಪರಿಶೋಧನೆ ನಡೆಸದೇ ನೈಜವಾದ ಸಾವಿನ ಸಂಖ್ಯೆಗಳನ್ನು ಬಚ್ಚಿಟ್ಟ ಆಗಿನ ಸರ್ಕಾರ, ನ್ಯಾಯಯುತವಾದ ಯಾವುದೇ ಕ್ರಮ ಕೈಗೊಳ್ಳದೇ ಜನರಿಗೆ ಮೋಸ ಎಸಗಿ, ಅವ್ಯವಹಾರದಲ್ಲಿ ತೊಡಗಿತ್ತು ಎಂದು ಸಚಿವರು ವಿವರಿಸಿದರು.
ಈ ಎಲ್ಲಾ ಅವ್ಯವಹಾರಗಳಲ್ಲಿನ ಅಂಶಗಳನ್ನು ತನಿಖೆ ಮಾಡಿ ಎಫ್.ಐ.ಆರ್, ದೋಷಾರೋಪ ಪಟ್ಟಿ ಮತ್ತು ಅಪರಾಧಿಗಳನ್ನು ಪತ್ತೆ ಹಚ್ಚಲು ಮತ್ತು ಸೂಕ್ತ ಶಿಕ್ಷೆಗೆ ಅಭಿಯೋಜನೆಗೆ ಒಳಪಡಿಸುವ ಮೂಲಕ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಸಚಿವರು ವಿವರಿಸಿದರು.