ಬೀದರ್, ಫೆಬ್ರವರಿ 9: ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪೂರ ಗ್ರಾಮದ ಪೂಜಾ ಫಂಕ್ಷನ್ ಹಾಲ್ ಬಳಿ ನಿಲ್ಲಿಸಿದ್ದ ಕಾರುಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಇಂದು ಸಂಭವಿಸಿದೆ.
ಕಾರ್ಯಕ್ರಮಕ್ಕೆ ಆಗಮಿಸಿದ್ದವರು ತಮ್ಮ ಕಾರುಗಳನ್ನು ಫಂಕ್ಷನ್ ಹಾಲ್ ಹೊರಭಾಗದಲ್ಲಿ ನಿಲ್ಲಿಸಿ ಒಳಗೆ ತೆರಳಿದ್ದ ವೇಳೆ, ಅತಿಯಾದ ಬಿಸಿಲಿನ ತಾಪಮಾನದಿಂದಾಗಿ ಒಂದು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ, ಪಕ್ಕದಲ್ಲೇ ನಿಲ್ಲಿಸಿದ್ದ ಇನ್ನೆರಡು ಕಾರುಗಳಿಗೂ ಆವರಿಸಿಕೊಂಡಿದೆ.
ಘಟನೆಯಿಂದ ಸ್ಥಳದಲ್ಲಿ ಭಾರೀ ಹೊಗೆ ಆವರಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮೂರು ಕಾರುಗಳಿಗೆ ಭಾರೀ ಪ್ರಮಾಣದ ಹಾನಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಬೆಚ್ಚಿಬಿದ್ದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

