ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ಗೆ ನಿರಾಸೆಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ಮನೆ ಊಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಅರ್ಜಿ ಸಲ್ಲಿಸಿದ್ದು ಆ ನಂತರ ವಾದ ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಾಧೀಶರಿಂದ ಅರ್ಜಿ ವಜಾಗೊಳಿಸಲಾಗಿದೆ.
ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ ಕಡಿಮೆಯಾಗುತ್ತಿದೆ ಎಂಬ ಕಾರಣ ನೀಡಿ ಮನೆಯ ಊಟ ತರಿಸಲು ಅನುಮತಿ ಕೋರಿ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.
ಈ ಅರ್ಜಿಯ ವಿಚಾರಣೆಯು ಮತ್ತೆ ಇದೇ ಜುಲೈ 29ರಂದು ನಡೆಯಲಿದೆ. ಇಂದು ದರ್ಶನ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ದರ್ಶನ್ ಪರ ವಕೀಲರು ಈ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ.
ಜೈಲೂಟದಿಂದ ದರ್ಶನ್ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.