ಬೆಂಗಳೂರು: ಗ್ಯಾಸ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಗ್ಯಾಸ್ ದರ ಏರಿಕೆಯು ಮೋದಿ ಸರ್ಕಾರದ ಕೊಡುಗೆಯಾಗಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಮಹಿಳಾ ದಿನಾಚರಣೆಯ ದಿನವೇ ದರ ಹೆಚ್ಚಳವಾಗಿರುವುದು ಆಶ್ಚರ್ಯಕರ ಎಂದು ಅವರು ಟೀಕಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಎಲ್ಲೂ ಕಾಣಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇನ್ನು ಪ್ರಸ್ತುತ ನಡೆಯುತ್ತಿರುವ ಯುದ್ಧದ ಪರಿಣಾಮ ಇಡೀ ವಿಶ್ವದ ಮೇಲೆ ಬೀರಿದ್ದು, ಭಾರತಕ್ಕೂ ಅದರ ಪರಿಣಾಮ ಎದುರಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಗ್ಯಾಸ್ ಸೇರಿ ಅಗತ್ಯ ವಸ್ತುಗಳ ದರವನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಆರು ವರ್ಷ ಪೂರೈಸಿದ ವಿಚಾರಕ್ಕೂ ಲಕ್ಷ್ಮೀ ಹೆಬಾಳ್ಕರ್ ಪ್ರತಿಕ್ರಿಯೆ ನೀಡಿದರು. ಡಿಕೆ ಶಿವಕುಮಾರ್ ಅತ್ಯಂತ ಯಶಸ್ವಿಯಾಗಿ ಆರು ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದಾರೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಇಂದು ಸಂಜೆ ಅವರು ಔತಣಕೂಟ ಆಯೋಜಿಸಿದ್ದು, ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ ಎಂದರು. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂಬುದು ಅವರ ಕನಸು ಎಂದು ತಿಳಿಸಿದರು. ಮುಂದಿನ ನಿರ್ಧಾರಗಳ ಬಗ್ಗೆ ಏನೇ ಇದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದಾರೆ.

