ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಸಿಲಿಂಡರ್ ಹಿಡಿದು ಪ್ರತಿಭಟನೆ ನಡೆಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ನಾಚಿಕೆ, ಮಾನ-ಮರ್ಯಾದೆ ಯಾವುದೂ ಇಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತಿದ್ದಾರೆ. ಕಮರ್ಷಿಯಲ್ ಸಿಲಿಂಡರ್ ಬಳಕೆ ಸಂಬಂಧ ಇರುವ ನಿರ್ಬಂಧಗಳನ್ನು ಸಡಿಲಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ವಿಜಯೇಂದ್ರ ಹೇಳಿದರು. ಇಂತಹ ಸಂದರ್ಭದಲ್ಲಿಯೂ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆ ಮಾಡುವುದು ಪಕ್ಷದ ದಿವಾಳಿತನವನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಇದೇ ವೇಳೆ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಕೂಡ ಪ್ರಶ್ನೆ ಎತ್ತಿದ ಅವರು, ಮುಖ್ಯಮಂತ್ರಿ ಮಂಡಿಸಿರುವ 4.48 ಲಕ್ಷ ಕೋಟಿ ರೂ. ಬಜೆಟ್ ನಡುವೆಯೂ ಕೆಲವು ಇಲಾಖೆಗಳ ಸಿಬ್ಬಂದಿಗೆ ಸಂಬಳವೇ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಶಿವಮೊಗ್ಗ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆಗೆ ಫೆಬ್ರವರಿ ತಿಂಗಳ ಸಂಬಳ ಇನ್ನೂ ನೀಡಲಾಗಿಲ್ಲ ಎಂದು ಅವರು ಹೇಳಿದರು.
ಅಂತರರಾಷ್ಟ್ರೀಯ ಪರಿಸ್ಥಿತಿಯನ್ನು ಉಲ್ಲೇಖಿಸಿದ ವಿಜಯೇಂದ್ರ, ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಏಕಾಏಕಿ ಉಂಟಾಗಿದೆ. ಯುದ್ಧದಂತಹ ಪರಿಸ್ಥಿತಿಗಳು ಮುಂಚಿತವಾಗಿ ಯಾರಿಗೂ ತಿಳಿಯದೇ ತಕ್ಷಣ ಎದುರಾಗಬಹುದು. ಇಂತಹ ಸಂದರ್ಭಗಳಿಗೆ ದೇಶ ಸಿದ್ಧವಾಗಿರಬೇಕೆಂಬುದು ಮುಖ್ಯ ಎಂದು ಅವರು ಹೇಳಿದರು.

