Covid 19 : ಕೋವಿಡ್ ಪಾಸಿಟಿವ್ ಸೋಂಕಿತರು ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಕೋವಿಡ್ ಟೆಸ್ಟಿಂಗ್ ಕೂಡ ಬೆಂಗಳೂರಿನಲ್ಲಿ ಹೆಚ್ಚಿಸಲಾಗಿದೆ. ಇಂದಿಗೆ ರಾಜ್ಯದಲ್ಲಿ ಒಟ್ಟು 80 ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರಿನಲ್ಲೇ 73 ಪ್ರಕರಣಗಳಿವೆ. ಎಲ್ಲಿಯೂ ಕೋವಿಡ್ ನಿಂದಾಗಿ ಸಾವು ಸಂಭವಿಸಿಲ್ಲ.
ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯನ್ನು ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿಯೇ ಹೊಸದಾಗಿ 35 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರಿನಲ್ಲಿ ತಲಾ ಒಂದು ಕೊರೊನಾ ಸೋಂಕಿತರು ಪತ್ತೆಯಾಗಿವೆ. ಇಂದು ಒಟ್ಟು 191 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.
ಅಧಿಕಾರಿಗಳೊಂದಿಗೆ ಸಿಎಂ ಸಭೆ :
ಮಹಾಮಾರಿ ಕೋವಿಡ್ ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ವಯಸ್ಕರು, ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.
ಕೋವಿಡ್ಗೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದರು. ಎಂತಹದ್ದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಸಿಎಂ ಸೂಚನೆ ನೀಡಿದರು.

