ಮೈಸೂರು,ಸೆ. 25- ಯುವಕರ ಸಂಭ್ರಮ ಎಂದೇ ಹೇಳಲಾಗುವ ಯುವ ಸಂಭ್ರಮವು ದಸರಾ ಮಹೋತ್ಸವದ ಮೊದಲ ಅದ್ದೂರಿ ಕಾರ್ಯಕ್ರಮವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ ಮಹಾದೇವಪ್ಪನವರು ಹೇಳಿದರು.
ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ, ಯುವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಯುವಸಂಭ್ರಮದಲ್ಲಿ ಭಾಗವಹಿಸಬೇಕೆಂದು ರಾಜ್ಯದ 470 ಕಾಲೇಜುಗಳಿಂದ ಯುವ ಪ್ರತಿಭೆಗಳು ಅರ್ಜಿ ಸಲ್ಲಿಸಿದ್ದು, 150 ಕಾಲೇಜುಗಳು ಆಯ್ಕೆಯಾಗಿ 120 ಕಾಲೇಜುಗಳನ್ನು ಕೈ ಬಿಡಲಾಗಿತ್ತು. ಆದರೇ ಯಾವುದೇ ಪ್ರತಿಭೆಗಳಿಗೆ ಮೋಸವಾಗಬಾರದು ಎಂಬ ಕಾರಣದಿಂದ ಯುವ ಸಂಭ್ರಮವನ್ನು ಒಂದು ದಿನ ಹೆಚ್ಚು ಮಾಡಿ ಅವರಿಗೂ ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.
ಯುವಸಂಭ್ರಮದಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ನಡೆಯಲಿದ್ದು, ಅಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಪ್ರತಿಯೊಬ್ಬರೂ ನೋಡಬೇಕು. ಕಾರ್ಯಕ್ರಮ ನೀಡಲು ಬಂದಿರುವಂತಹ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ ಅವರಲ್ಲಿ ಇನ್ನು ಹೆಚ್ಚಿನ ಆತ್ಮವಿಶ್ವಾಸವನ್ನು ಮೂಡಿಸಬೇಕು ಎಂದು ಹೇಳಿದರು.
ಸಂಸ್ಕೃತಿಯಲ್ಲಿ ಧರ್ಮ ಒಂದು ಭಾಗವಾಗಿದ್ದು, ಧರ್ಮವೇ ಸಂಸ್ಕೃತಿಯಲ್ಲ. ಎಲ್ಲಾ ಯುವ ಪೀಳಿಗೆಗಳು ಇದನ್ನು ಅರಿತು ಎಲ್ಲರಿಗೂ ಸಮಾನತೆಯನ್ನು ತಂದುಕೊಟ್ಟಿರುವ ಸಂವಿಧಾನದ ಆಶಯವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸಮಾನತೆ ಮತ್ತು ಬ್ರಾತೃತ್ವವನ್ನು ಬೆಳೆಸಬೇಕು ಎಂದು ಹೇಳಿದರು.
ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದಸರಾ ಮಹೋತ್ಸವದ ಮೊದಲನೇ ಕಾರ್ಯಕ್ರಮವಾದ ಯುವಸಂಭ್ರಮ ಯುವಕರಿಗೆ ರಾಸಾದೌತಣವಾಗಿದೆ. ಈ ಕಾರ್ಯಕ್ರಮವನ್ನು ವಿಜೃಂಭಣೆಯಾಗಿ ಮಾಡಲು ಸರ್ಕಾರ ಕಾರಣವಾಗಿದ್ದು, ಅತಿ ಹೆಚ್ಚು ಅನುದಾನವನ್ನು ನೀಡಿ ದಸರಾ ಆಚರಣೆಯ ಯುವಸಂಭ್ರಮದಲ್ಲಿ ಅವಿಸ್ಮರಣೀಯವಾಗಿರುವ ಕಾರ್ಯಕ್ರಮಗಳನ್ನು ನೀಡುವಂತೆ ತಿಳಿಸಿದರು.
ಎಲ್ಲಾ ಯುವಜನರಿಗಾಗಿ ಮಾಡಿರುವ ಕಾರ್ಯಕ್ರಮದಲ್ಲಿ ಕ್ವಾಲಿಟಿ ಇರುವಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿದ್ದು, ಎಲ್ಲಾ ಕಾಲೇಜು ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಲಿದ್ದಾರೆ. ಸಾರ್ವಜನಿಕರ ಬೆಂಬಲದಿಂದ ಮಾತ್ರ ಈ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ. ಹಾಗಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಖ್ಯಾತ ಕನ್ನಡ ಚಲನಚಿತ್ರ ನಟರಾದ ಶ್ರೀ ಮುರುಳಿ ಅವರು ಮಾತನಾಡಿ, ದಸರಾ ಎಂದರೆ ಎಲ್ಲರಿಗೂ ಬಹಳ ಅಚ್ಚುಮೆಚ್ಚು. ದಸರಾ ಬಂತೆಂದರೆ ಇಲ್ಲಿನ ಜನರು ಹಾಗೂ ಮೈಸೂರಿನ ಆಡಂಬರವನ್ನು ನೋಡಲು ಎರಡು ಕಣ್ಣು ಸಾಲದು. ಇಂತಹ ಅದ್ಬುತ ದೃಶ್ಯಗಳು ಪ್ರಪಂಚದಲ್ಲಿ ಎಲ್ಲೋಯೂ ನೋಡಲು ಸಿಗುವುದಿಲ್ಲ ಎಂದರು.
ನಮ್ಮ ನಾಡಹಬ್ಬವನ್ನು ತಲಾ ತಲಾತರಗಳಿಂದ ಬೆಳೆಸಿಕೊಂಡು ಬಂದು, ಇಂದಿಗೂ ಅದೇ ವಿಜೃಂಭಣೆಯಿಂದ ಆಚರಿಸುತ್ತಿರುವುದು ಸಂತಸದ ಸಂಗತಿ. ನಾವು ಇದರಲ್ಲಿ ಪಾಲ್ಗೊಂಡಿರುವುದು ಹೆಚ್ಚಿನ ಖುಷಿ ನೀಡಿದೆ. ಕರ್ನಾಟಕದ ಹೆಮ್ಮೆಯಾಗಿರುವ ದಸರಾವನ್ನು ಎಲ್ಲರೂ ಸಂಭ್ರಮದಿಂದ ಆಚರಿಸಿ ಯಶಸ್ವಿಗೊಳಿಸೋಣ ಎಂದರು.
ಈ ವೇದಿಕೆಯಲ್ಲಿ ಹಾಗೂ ವೇದಿಕೆಯ ಮುಂಭಾಗದಲ್ಲಿ ಬಹಳಷ್ಟು ಪ್ರತಿಭೆಗಳಿವೆ. ಎಲ್ಲರೂ ತಮ್ಮ ನೆಚ್ಚಿನ ಕ್ಷೇತ್ರದಲ್ಲಿ ಸಾಧನೆ ಮಾಡಿ, ನಮ್ಮ ಕರ್ನಾಟಕ ಭಾವುಟ ಎಲ್ಲೆಡೆ ಹಾರುವಂತೆ ಮಾಡಬೇಕು ಎಂದರು.
ಖ್ಯಾತ ಕನ್ನಡ ಚಲನಚಿತ್ರ ನಟಿಯಾದ ರುಕ್ಮಿಣಿ ವಸಂತ್ ಅವರು ಮಾತನಾಡಿ, ವಿಶ್ವ ವಿಖ್ಯಾತ ನಾಡಹಬ್ಬದಲ್ಲಿ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಮೈಸೂರು ಜನತೆ ಯಾವಾಗಲು ನಮ್ಮ ಮೇಲೆ ಚಿತ್ರ ರಂಗದ ಮೇಲೆ ಇಟ್ಟಿರುವ ಪ್ರೀತಿಗೆ ಎಂದಿಗೂ ಚಿರಋಣಿ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರ್ ನಾಥ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯನಿರ್ವಾಣಾಧಿಕಾರಿಗಳಾದ ಕೆ. ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್, ಡಿ ಸಿ ಪಿ ಮುತ್ತುರಾಜ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಅ.3 ರಂದು ದಸರಾ ಚಲನಚಿತ್ರೋತ್ಸವ :

ದಸರಾ ಮಹೋತ್ಸವದ ಅಂಗವಾಗಿ ಚಲನಚಿತ್ರೋತ್ಸವ ಏರ್ಪಡಿಸಲಾಗಿದ್ದು,ಅ. 3 ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಯಾಗಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರದ ಖ್ಯಾತ ನಾಯಕನಟರಾದ ರಮೇಶ್ ಅರವಿಂದ್, ಡಾಲಿ ಧನಂಜಯ, ಕಾಂತಾರ ಖ್ಯಾತಿಯ ಸಪ್ತಮಿ ಗೌಡ, ಶರಣ್ಯ ಶೆಟ್ಟಿ, ಅಕ್ಷಿತ ಬೋಪಯ್ಯ ಮೆರಗು ನೀಡಲಿದ್ದಾರೆ. ಬೆಳಿಗ್ಗೆ 11.00 ಗಂಟೆಗೆ ಸಾಧುಕೋಕಿಲಾ ತಂಡದವರಿಂದ ಸಂಗೀತ ಮತ್ತು ಮನರಂಜನೆ ಕಾರ್ಯಕ್ರಮ ನಡೆಯಲಿದೆ.
ನಿರ್ಮಾಪಕ, ಕನ್ನಡದ ಮುತ್ತು – ಕರ್ನಾಟಕ ಕುಳ್ಳ ದಿವಂಗತ ದ್ವಾರಕೀಶ್ ಅವರ ಸವಿನೆನಪಿನಲ್ಲಿ ಈ ಬಾರಿಯ ಚಲನಚಿತ್ರೋತ್ಸವ ಹಮ್ಮಿಕೊಳ್ಳಲಾಗಿದ್ದು, ಅವರ ಪುತ್ರ ಯೋಗಿಶ್ ಅವರಿಗೆ ಗೌರವ ಸಮರ್ಪಣೆ ಹಾಗೂ ದ್ವಾರಕೀಶ್ ಅಭಿನಯದ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.
ಅ.4 ರಿಂದ 10 ರವರೆಗೆ ಬಿ.ಎಂ ಹ್ಯೆಬಿಟೆಡ್ ಮಾಲ್ನ DRC ಸಿನಿಮಾಸ್ನಲ್ಲಿ ಒಂದು ಪರದೆ ಹಾಗೂ ಮಾಲ್ ಆಫ್ ಮೈಸೂರಿನ ಐನಾಕ್ಸ್ ಸಿನಿಮಾಸ್ನಲ್ಲಿ 3 ಪರದೆಗಳಲ್ಲಿ ಪ್ರದರ್ಶನ ಗೊಳ್ಳಲಿದೆ
ಓಲ್ಡ್ ಈಸ್ ಗೋಲ್ಡ್ ಶೀರ್ಷಿಕೆಯಲ್ಲಿ ಡಾ| ರಾಜ್ ಕುಮಾರ್. ಡಾ ವಿಷ್ಣುವರ್ಧನ್, ಡಾ. ಅಂಬರೀಷ್, ಶಂಕರ್ನಾಗ್ ಹಾಗೂ ಪುನೀತ್ ರಾಜಕುಮಾರ್, ರಮೇಶ್ ಅರವಿಂದ, ಶ್ರೀನಾಥ್, ಶಿವವರಾಜ್ ಕುಮಾರ್, ರವಿಚಂದ್ರನ್ ಹಾಗೂ ದಿ|| ಅಪರ್ಣ ಸಿನಿಮಾಗಳನ್ನು ವೀಕ್ಷಿಸಬಹುದಾಗಿದೆ.
ಈ ಬಾರಿ ಬುಡಕಟ್ಟು ಭಾಷೆಗಳಾದ ಬೊಡೊ, ಜನ್ಸಿಯ ಹಾಗೂ ಕರ್ನಾಟಕ ಕೊಡವ ಮತ್ತು ಅರೆಭಾಷೆಯ ಚಲನಚಿತ್ರಗಳು ಪ್ರದರ್ಶನವಾಗುತ್ತಿದ್ದು, ಒಟ್ಟಾರೆ 112 ಚಲನಚಿತ್ರಗಳನ್ನು ವೀಕ್ಷಿಸಬಹುದಾಗಿದೆ.
ಈ ಬಾರಿ ವಿಶೇಷವಾಗಿ ಸಿನಿ ಪೋಟೋ ಪ್ರದರ್ಶನವನ್ನು ಐನಾಕ್ಸ್ ಸಿನಿಮಾಸ್ ಹೊರ ಆವರಣದಲ್ಲಿ ಅಕ್ಟೋಬರ್ 4 ರಿಂದ 10 ರವರೆಗೆ ಆಯೋಜನೆ ಮಾಡಲಾಗಿದೆ.
ಯುವಜನಾಂಗಕ್ಕೆ ಪ್ರೋತ್ಸಾಹ ನೀಡಲು ಕಿರುಚಿತ್ರ ಸ್ಪರ್ಧೆ ಏರ್ಪಡಿಸಲಾಗಿದ್ದು, ಆಯ್ಕೆಗೊಂಡ ಅತ್ಯುತ್ತಮ 10 ಕಿರುಚಿತ್ರಗಳನ್ನು ಸಹ ದೊಡ್ಡ ಪರದೆಯಲ್ಲಿ ಪ್ರದರ್ಶಿಸಲಾಗುವುದು. ಅಕ್ಟೋಬರ್ 8 ರಂದು ಬಹುಮಾನ ವಿತರಣೆ ಮಾಡಲಿದ್ದು, ಖ್ಯಾತ ನಟ ಮಂಡ್ಯ ರಮೇಶ್ ಭಾಗವಹಿಸಲಿದ್ದಾರೆ.

