ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಕಾಂಗ್ರೆಸ್ ಪಕ್ಷ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಮತದಾರರನ್ನು ಸೆಳೆಯಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕಾರ್ಯದರ್ಶಿ ಅಭಿಷೇಕ್ ದತ್ತ ಅವರ ಸೂಚನೆ ಮೇರೆಗೆ ಪ್ರಚಾರ ಕಾರ್ಯ ವೇಗ ಪಡೆದುಕೊಂಡಿದೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ 12ನೇ ವಾರ್ಡ್ನ ಅಜಾದ್ ನಗರದಲ್ಲಿ ಭರ್ಜರಿ ರೋಡ್ ಶೋ ಹಾಗೂ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು. ಈ ವೇಳೆ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಅಭಿಷೇಕ್ ದತ್ತ ಸ್ವತಃ ಭಾಗವಹಿಸಿ ಮತದಾರರನ್ನು ಸಂಪರ್ಕಿಸಿ ಬೆಂಬಲ ಕೋರಿದರು.
ಇದರ ಜೊತೆಗೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಪುಲಿಕೇಶಿನಗರ ಶಾಸಕ ಎಸಿ ಶ್ರೀನಿವಾಸ್ ಹಾಗೂ ಕೂಡ್ಲಿಗಿ ಶಾಸಕ ಶ್ರೀನಿವಾಸ್ ಸೇರಿದಂತೆ ಕೆಪಿಸಿಸಿ ಪದಾಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ರೋಡ್ ಶೋ ವೇಳೆ ಕಾಂಗ್ರೆಸ್ ಪರ ಘೋಷಣೆಗಳು ಮೊಳಗಿದವು. ಮನೆ ಮನೆಗೆ ತೆರಳಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಲಾಯಿತು. ಉಪಚುನಾವಣೆಯ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ರಾಜಕೀಯ ರಂಗ ಮತ್ತಷ್ಟು ಚುರುಕುಗೊಂಡಿದೆ.

