ಹಾಸನ: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅಪೆಕ್ಸ್ ಬ್ಯಾಂಕ್ ಹಾಲಿ ನಿರ್ದೇಶಕ ಪಟೇಲ್ ಶಿವರಾಂ (75) ವಿಧಿವಶರಾಗಿದ್ದಾರೆ. ನಗರದ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಅವರು ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. 2010-2016 ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಅವರು ಸೇವೆಸಲ್ಲಿಸಿದ್ದರು. ಅಲ್ಲದೇ ಹೆಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕ, ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಅವರ ಕುಟುಂಬಕ್ಕೆ ಪಟೇಲ್ ಆಪ್ತರಾಗಿದ್ದರು. ಈ ಮೂಲಕ ಹಾಸನ ಜಿಲ್ಲೆಯ ಪ್ರಭಾವಿ ಜೆಡಿಎಸ್ ಮುಖಂಡರಾಗಿದ್ದರು. ಸುಮಾರು ನಾಲ್ಕು ದಶಕಗಳಿಂದ ಜೆಡಿಎಸ್ನಲ್ಲಿ ಸಕ್ರಿಯರಾಗಿದ್ದರು.
ಸುಮಾರು 4 ದಶಕಗಳ ಕಾಲ ಜೆಡಿಎಸ್ನಲ್ಲಿ ಸಕ್ರಿಯ ರಾಜಕಾರಣದಲ್ಲಿದ್ದ ಪಟೇಲ್ ಶಿವರಾಂ ನಿಧನಕ್ಕೆ ಜೆಡಿಎಸ್ ನಾಯಕರು ಸಂತಾಪ ಸೂಚಿಸಿದ್ದಾರೆ. ಪಟೇಲ್ ಶಿವರಾಂ ಅವರು ಹೃದಯಾಘಾತದಿಂದ ನಿಧನರಾದ ವಿಷಯ ಅತೀವ ದುಃಖವನ್ನುಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬದವರಲ್ಲಿ ತೀವ್ರ ಸಂತಾಪ ಸಲ್ಲಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ X ಮಾಡಿದ್ದಾರೆ.
ಹಾಸನ ಜಿಲ್ಲೆಯ ಹಿರಿಯ ರಾಜಕಾರಣಿ, ವಿಧಾನ ಪರಿಷತ್ ಮಾಜಿ ಸದಸ್ಯರು, ಸರಳರು, ಸಜ್ಜನರು, ನಮ್ಮ ತಂದೆಯವರ ಆತ್ಮೀಯರೂ ಆಗಿದ್ದ ಹಿರಿಯರಾದ ಶ್ರೀ ಪಟೇಲ್ ಶಿವರಾಂ ಅವರ ನಿಧನ ನನಗೆ ಅತೀವ ದುಃಖವುಂಟು ಮಾಡಿದೆ. ಜೆಡಿಎಸ್ ಪಕ್ಷದಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಶ್ರೀಯುತರು, ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಅತ್ಯಂತ ಪ್ರಾಮಾಣಿಕವಾಗಿ ದುಡಿದಿದ್ದರು. ಅವರ ನಿಧನ ವೈಯಕ್ತಿಕವಾಗಿ ನನಗೆ ಬಹುದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ X ಮಾಡಿದ್ದಾರೆ.