Dharmendra : ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಹಿರಿಯ ಧರ್ಮೇಂದ್ರ ಅವರು ನಿಧನಹೊಂದಿದ್ದಾರೆ ಎಂಬ ಸುದ್ದಿ ಬರುತ್ತಿದ್ದು, ಇದು ಸಂಪೂರ್ಣ ಸುಳ್ಳು ಎಂದು ಅವರ ಪುತ್ರಿ ಇಶಾ ಡಿಯೋಲ್ ತಿಳಿಸಿದ್ದಾರೆ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಧರ್ಮೇಂದ್ರ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಉಸಿರಾಟದ ತೊಂದರೆಯಿಂದ ಮುಂಬಯಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಟ ಧರ್ಮೇಂದ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಧರ್ಮಜೀ ಅವರ ಆರೋಗ್ಯ ಉತ್ತಮ ಸ್ಥಿತಿಯಲ್ಲಿಲ್ಲ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಆದರೆ ಅವರ ಮಗ ಸನ್ನಿ ಡಿಯೋಲ್ ಅವರ ಪ್ರತಿನಿಧಿ, ಧರ್ಮೇಂದ್ರ ಅವರು ವೆಂಟಿಲೇಟರ್ನಲ್ಲಿದ್ದಾರೆ ಎನ್ನುವ ವರದಿ ಅಲ್ಲಗಳೆದಿದ್ದಾರೆ.
ಧರ್ಮೇಂದ್ರ ಅವರ ಪತ್ನಿ, ನಟಿ-ರಾಜಕಾರಣಿ ಹೇಮಾ ಮಾಲಿನಿ ಕೂಡ ಹಿರಿಯ ನಟನ ಆರೋಗ್ಯದ ಬಗ್ಗೆ ಮಾಧ್ಯಮಗಳು “ಬೇಜವಾಬ್ದಾರಿಯುತ” ವರದಿ ಮಾಡುವುದನ್ನು ಟೀಕಿಸಿದರು.
“ಈಗ ನಡೆಯುತ್ತಿರುವ ಘಟನೆಗಳು ಕ್ಷಮಿಸಲಾಗದವು! ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಚಾನೆಲ್ಗಳು ಸುಳ್ಳು ಸುದ್ದಿಗಳನ್ನು ಹೇಗೆ ಹರಡಬಹುದು? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿ. ದಯವಿಟ್ಟು ಕುಟುಂಬಕ್ಕೆ ಮತ್ತು ಅದರ ಗೌಪ್ಯತೆಯ ಅಗತ್ಯಕ್ಕೆ ಸರಿಯಾದ ಗೌರವವನ್ನು ನೀಡಿ,” ಎಂದು ಮಾಲಿನಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರಾದ ಧರ್ಮೇಂದ್ರ 1960 ರ ಚಲನಚಿತ್ರ ‘ದಿಲ್ ಭಿ ತೇರಾ ಹಮ್ ಭಿ ತೇರೆ’ ಮೂಲಕ ವೃತ್ತಿಜೀವನ ಪ್ರಾರಂಭಿಸಿದ್ದರು. ಅವರಿಗೆ 2012 ರಲ್ಲಿ ಭಾರತ ಸರ್ಕಾರದಿಂದ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

