ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಗೊಂದಲ, ಅಸಮಾಧಾನಗಳು ಹೆಚ್ಚಾದ ಹಿನ್ನಲೆ ಖುದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದು, ಶಾಸಕರ ಜೀತೆ ಒನ್ ಟು ಒನ್ ಸಭೆ ನಡೆಸುತ್ತಿದ್ದಾರೆ.ಈ ನಡುವೆಯೂ ಸಿಎಂ ಬದಲಾವಣೆಯ ಚರ್ಚೆ ಕಾಂಗ್ರೆಸ್ ನಲ್ಲಿ ಇನ್ನಷ್ಟು ಜೋರಾಗಿದೆ.
ರಾಮನಗರ ಕ್ಷೇತ್ರದ ಶಾಸಕ ಇಕ್ಸಾಲ್ ಹುಸೇನ್ ಈ ಬಗ್ಗೆ ಹೊಸ ಚರ್ಚೆ ಹುಟ್ಟುಹಾಕಿದ್ದು, ಪಕ್ಷವನ್ನು ಯಶಸ್ವಿಯಾಗಿ ಸಂಘಟಿಸಿದ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ನೀಡಬೇಕು, ಕಾಂಗ್ರೆಸ್ ನ 100 ಕ್ಕೂ ಹೆಚ್ಚು ಶಾಸಕರು ಬದಲಾವಣೆ ಬಯಸಿದ್ದಾರೆ ಮತ್ತು ಸುರ್ಜೇವಾಲಾ ಅವರ ಬಳಿಯೂ ಈ ವಿಚಾರ ಪ್ರಸ್ತಾಪಿಸಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದರು.
ಇದ್ರಿಂದ ಕಾಂಗ್ರೆಸ್ ನಲ್ಲಿ ಇನ್ನಷ್ಟು ಗೊಂದಲ ಸೃಷ್ಟಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟೀಸ್ ಜಾರಿ ಮಾಡಿದ್ದಾರೆ.ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ತಾವು ಇಂದು ಮಾಧ್ಯಮಗಳಿಗೆ ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ,ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿರುತ್ತೀರಿ ಎಂದು ಈ ನೋಟೀಸ್ ನಲ್ಲಿ ಉಲ್ಲೇಖಿಸಲಾಗಿದೆ.
ಹೀಗಾಗಿ ನಿಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ.ನಿಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಕಾರಣ ಕೇಳಿ ನೋಟೀಸು ನೀಡಲಾಗಿದೆ.ಈ ನೋಟೀಸ್ ತಲುಪಿದ ಒಂದು ವಾರದ ಒಳಗಾಗಿ ನಿಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಲು ಸೂಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಮ್ಮ ಪರ ಬ್ಯಾಟ್ ಬೀಸಿದ್ದ ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡಿದ್ದಾರೆ.

