DK Shivakumar : ಮಂಗಳೂರು ಜನ ಗ್ಯಾರಂಟಿ ಬೇಡ ಅಂದಿದ್ದರು. ಅವರೇ ಮೊದಲು ಕ್ಯೂನಲ್ಲಿ ನಿಂತಿದ್ದರು. ಮಂಗಳೂರು ಜನಕ್ಕೆ ಹೊಟ್ಟೆಬಟ್ಟೆಗೆ ಕಾಂಗ್ರೆಸ್ ಬೇಕು. ವೋಟ್ಗೆ ಬೇರೆಯವರು ಬೇಕು ಅಂತ ಹೇಳುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಈಗ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್, ಡಿ.ಕೆ.ಶಿವಕುಮಾರ್ ಅವರಿಗೆ ಕನಕಪುರದ ಆಚೆಗೆ ಬೇರೇನು ನಡೆಯುತ್ತಿದೆ ಎಂಬುದೇ ಗೊತ್ತಿಲ್ಲ. ಹೀಗಾಗಿ ಅನ್ಯ ಜಿಲ್ಲೆಗಳ ಬಗ್ಗೆ ತಾತ್ಸಾರದ ಮಾತನಾಡುತ್ತಿದ್ದಾರೆ. ಈ ಹಿಂದೆ ಬೆಂಗಳೂರು ನಗರದ ಜನತೆಯ ಬಗ್ಗೆಯೂ ಹೀಗೆ ಮಾತನಾಡಿದ್ದರು. ಮಂಗಳೂರು ಸೇರಿದಂತೆ ಕರಾವಳಿಯ ಜನರು ಸ್ವಾಭಿಮಾನಿಗಳು. ಬೆಂಗಳೂರಿನ ನಂತರ ಅತಿಹೆಚ್ಚು ತೆರಿಗೆ ಸಂಗ್ರಹವಾಗುವುದು ಇಲ್ಲಿಂದಲೇ. ನಿಮ್ಮ ಗ್ಯಾರಂಟಿ ನಂಬಿ ಮತದಾನ ಮಾಡುವಂತ ಬೌದ್ಧಿಕ ದಾರಿದ್ರ್ಯ ನಮಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನವರ ಗ್ಯಾರಂಟಿಗಾಗಿ ಹೊಟ್ಟೆಬಟ್ಟೆ ಕಟ್ಟಿಕೊಳ್ಳುವ ದಯನೀಯ ಸ್ಥಿತಿ ಮಂಗಳೂರಿನ ಜನರಿಗೆ ಬಂದಿಲ್ಲ. ಗ್ಯಾರಂಟಿ ಘೋಷಣೆಯ ಬಳಿಕವೂ ಉಡುಪಿ-ದಕ್ಷಿಣ ಕನ್ನಡದಲ್ಲಿ ಮಖಾಡೆ ಮಲಗಿರುವ ಕಾಂಗ್ರೆಸ್ ಅನ್ನು ಎಬ್ಬಿಸುವುದಕ್ಕೆ ವಿಶೇಷ ಯೋಜನೆ ರೂಪಿಸಿ ಎಂದು ಮಾಜಿ ಸಚಿವ ವಿ ಸುನಿಲ್ ಕುಮಾರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನೀವು ಗ್ಯಾರಂಟಿ ಘೋಷಣೆ ಮಾಡುವಾಗ ಇದು ಮಂಗಳೂರಿಗೆ ಅನ್ವಯವಾಗುವುದಿಲ್ಲ ಎಂಬ ನಿಬಂಧನೆ ವಿಧಿಸಿದ್ದಿರೇ? ಗ್ಯಾರಂಟಿ ಜಾರಿಯಾದ ಮೇಲೆ ಮಂಗಳೂರಿನವರು ಅರ್ಜಿ ಸಲ್ಲಿಸಬಾರದು ಎಂದು ಕರಾರು ಹೇರಿದ್ದಿರೇ? ಮಂಗಳೂರು ಕರ್ನಾಟಕದ ಭಾಗವಾಗಿರುವುದರಿಂದ ಇಲ್ಲಿನ ಜನ ಅರ್ಜಿ ಸಲ್ಲಿಸಿದ್ದಾರೆ. ಅಷ್ಟಕ್ಕೂ ನಿಮ್ಮ ಗ್ಯಾರಂಟಿ ಯೋಜನೆ ಕನಕಪುರದವರಿಗೆ ಮಾತ್ರ ಸೀಮಿತವಲ್ಲ. ರಾಜ್ಯದ ಕರದಾತರ ಹಣದಲ್ಲಿ ಅನುಷ್ಠಾನ ಮಾಡುತ್ತಿದ್ದೀರಿ. ಹೊಟ್ಟೆಬಟ್ಟೆ ಕಟ್ಟಿಯಾದರೂ ನೀವು ಇದನ್ನು ಅನುಷ್ಠಾನ ಮಾಡಬೇಕೆ ವಿನಾ ನಿಲ್ಲಿಸುವುದಕ್ಕೆ ಕಳ್ಳಮಾರ್ಗ ಹುಡುಕಬೇಡಿ ಎಂದು ವ್ಯಂಗ್ಯವಾಡಿದ್ದಾರೆ.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

