ಬೆಂಗಳೂರು : ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಹಾಗೂ ವಿಧಾನಸಭಾ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಆಗ್ರಹಿಸಿದರು.
ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ ಸಂಘರ್ಷಗಳು ಹೆಚ್ಚಾಗುತ್ತವೆ. ಆದ ಕಾರಣಕ್ಕೆ ಇವರ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿ ಕೇಂದ್ರ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಕೀಳು ಮಟ್ಟದ ಪದ ಬಳಕೆ ಮಾಡಿರುವ ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ರೇಣುಕಾಸ್ವಾಮಿಗೆ ಆದ ಗತಿ ನಿನಗೆ ಆಗುತ್ತದೆ ಎಂದು ಮುನಿರತ್ನ ಬೆದರಿಕೆ ಹಾಕಿದ್ದಾರೆ ಎಂದು ಗುತ್ತಿಗೆದಾರ ಆರೋಪ ಮಾಡಿದ್ದಾರೆ ಎಂದು ಕೇಳಿದಾಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದೀಪಕ್ ಮುನಿರತ್ನ ಸಂಬಂದಿ. ನೂರಕ್ಕೆ ನೂರರಷ್ಟು ಇದಕ್ಕೆ ಇವರ ಸಂಬಂಧ ಇದ್ದೇ ಇರುತ್ತದೆ. ಆಡಿಯೋದಲ್ಲಿ ರೌಡಿ ಸೈಲೆಂಟ್ ಸುನೀಲ್ ಹೆಸರು ಹೇಳಿದ್ದಾರೆ. ಅಂದರೆ ಯಾವ ರೀತಿಯ ವಾತಾವರಣ ಸೃಷ್ಟಿ ಮಾಡಿದ್ದಾರೆ ಎಂಬುದು ಇದನ್ನು ನೋಡಿದರೆ ತಿಳಿಯುತ್ತದೆ ಎಂದರು.
ಬಾಯಲ್ಲಿ ರಾಮನ ಜಪ, ಮಹಿಳೆಯರಿಗೆ ಅಪಮಾನ :
ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರೇ ಸಮುದಾಯದ ತಾಯಂದಿರನ್ನು ಅವಮಾನಿಸಿದ್ದಾರೆ. ಇದಕ್ಕೆ ನೀವೇ ಉತ್ತರಿಸಬೇಕು. ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ ಅವರು ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಇದರ ಬಗ್ಗೆ ಉತ್ತರಿಸಬೇಕು ಎಂದರು.
ಒಂದು ಕಡೆ ರಾಮನ, ಸಂಸ್ಕೃತಿಯ ಜಪ ಮಾಡುತ್ತ ಇನ್ನೊಂದು ಕಡೆ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡುವುದು. ಎಲ್ಲಿ, ಯಾರ ಬಳಿ ಮಾತನಾಡುತ್ತ ಇದ್ದೀನಿ ಎನ್ನುವ ಅರಿವೂ ಅವರಿಗಿಲ್ಲದೇ ಹೆಂಡತಿ, ತಾಯಿಯನ್ನು ಮಂಚಕ್ಕೆ ಕರೆಯುವ ಕೆಟ್ಟ ಪ್ರವೃತ್ತಿ ಕೇಂದ್ರ ಬಿಜೆಪಿ ನಾಯಕರಿಗೆ ಕೇಳಿಸುತ್ತಿಲ್ಲವೇ? ಆರ್ ಎಸ್ ಎಸ್ ನಂಟು ಇಟ್ಟುಕೊಂಡಿರುವ ಇವರ ನಡವಳಿಕೆ ನಾಚಿಕೆ ತರುವಂತಹದ್ದು ಎಂದರು.
80 ದಶಕದಲ್ಲಿ ದಲಿತರ ವಿರುದ್ಧ ಬಳಸುತ್ತಿದ್ದ ಪದಗಳನ್ನು ಈಗ ಬಳಸುತ್ತಾ ಇದ್ದಾರೆ. ಇಡೀ ಮಹಿಳಾ ಹಾಗೂ ತಾಯಿ ಕುಲಕ್ಕೆ ಅಪಮಾನ. ವಾರಕ್ಕೊಮ್ಮೆ ರಾಜ್ಯಕ್ಕೆ ಬಂದು ತೋಚಿದ್ದು ಮಾತನಾಡಿ ಹೋಗುವ ಕೇಂದ್ರ ಬಿಜೆಪಿ ನಾಯಕರು ಇದರ ಬಗ್ಗೆ ಉಸಿರು ಬಿಡಲಿ ಎಂದರು.
ಪ್ರಧಾನಿ ಮೋದಿ, ಅಮಿತ್ ಷಾ, ನಡ್ದಾ ಅವರಿಗೆ ಬಿಜೆಪಿ ಶಾಸಕನ ನುಡಿಮುತ್ತುಗಳ ಬಗ್ಗೆ ವಿವರಣೆ ನೀಡಬೇಕು. ಮೋದಿ ಅವರು ಇದನ್ನು ಸಹಿಸಿಕೊಳ್ಳಬಹುದು. ಏಕೆಂದರೆ ಈ ಹಿಂದೆ ಮೋದಿ ಅವರ ತಾಯಿಯ ಬಗ್ಗೆ ಮಾತನಾಡಿದ್ದನ್ನು ಮನ್ನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದರು.
ಕುಮಾರಸ್ವಾಮಿ ಟಾಂಗ್ :
ಒಕ್ಕಲಿಗರನ್ನು ಅಪಮಾನ ಮಾಡಲಾಗಿದೆ ಈಗ ಸಮುದಾಯದ ಪರವಾಗಿ ಕುಮಾರಸ್ವಾಮಿ ಅವರು ನಿಲ್ಲುತ್ತಾರ ಎಂದು ಕೇಳಿದಾಗ “ಇದರ ಬಗ್ಗೆ ಕುಮಾರಸ್ವಾಮಿ ಏನೇನು ಹೇಳಿಕೆ ನೀಡುತ್ತಾರೆ ಎಂಬುದನ್ನು ಮಧ್ಯಮದವರು ಗಮನಿಸಿ ನೋಡಿ. ನರೇಂದ್ರ ಮೋದಿ ಅವರಿಗೆ ಹೇಳಿ ಪಕ್ಷದಿಂದ ಮುನಿರತ್ನರನ್ನು ವಜಾ ಮಾಡಿಸುತ್ತಾರೆ. ಕುಮಾರಸ್ವಾಮಿ ಅವರಿಗೆ ಇರುವ ತಾಕತ್ತು ನಿಮಗೆ ಗೊತ್ತಿಲ್ಲ ಎಂದರು.

