ಹೈದರಾಬಾದ್: 371 ಕೋಟಿ ರೂ. ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಚಂದ್ರಬಾಬು ನಾಯ್ಡು ಅವರಿಗೆ ಕ್ಲೀನ್ ಚಿಟ್ ನೀಡಿದೆ.
ಕೌಶಲ್ಯ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ನಾಯ್ಡು ಅವರನ್ನು ರಾಜಮಹೇಂದ್ರವರಂ ಜೈಲಿನಲ್ಲಿ ಇರಿಸಲಾಗಿತ್ತು.
ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ನವೆಂಬರ್ 20 ರಂದು ಆಂಧ್ರಪ್ರದೇಶ ಹೈಕೋರ್ಟ್ ನಿಯಮಿತ ಜಾಮೀನು ನೀಡಿತು. ಅದಾದ ಒಂದು ವಾರದ ನಂತರ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಸುಪ್ರೀಂ ಕೋರ್ಟ್ ಅವರಿಗೆ ಅನುಮತಿ ನೀಡಿತ್ತು.
ಆ ಪ್ರಕರಣದಲ್ಲಿ ಹಣವನ್ನು ರುಪಯೋಗಪಡಿಸಿಕೊಳ್ಳುವಲ್ಲಿ ಚಂದ್ರಬಾಬು ನಾಯ್ಡು ಅವರ ಪಾತ್ರವನ್ನು ದೃಢೀಕರಿಸುವ ಯಾವುದೇ ಪುರಾವೆಗಳನ್ನು ತನಿಖಾಧಿಕಾರಿಗಳು ಇಲ್ಲಿಯವರೆಗೆ ಕಂಡುಕೊಂಡಿಲ್ಲ. ಹೀಗಾಗಿ, ಇಡಿ ಕ್ಲೀನ್ ಚಿಟ್ ನೀಡಿದೆ.
ಆಗಿನ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ನಡೆಸಿದ ತನಿಖೆಯ ಮೇರೆಗೆ ಕಳೆದ ವರ್ಷ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 31, 2023ರಂದು ಮಧ್ಯಂತರ ಜಾಮೀನು ಪಡೆಯುವ ಮೊದಲು ಅವರು 50 ದಿನಗಳ ಕಾಲ ಜೈಲಿನಲ್ಲಿ ಕಳೆದಿದ್ದರು.

