ಮಂಡ್ಯ : ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ವಿದೇಶಾಂಗ ಸಚಿರಾಗಿದ್ದ, ಮಹಾರಾಷ್ಟ್ರ ರಾಜ್ಯಪಾಲರಾಗಿ ಭಾರತದ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ರಾಜಕಾರಣ ಎಸ್.ಎಂ. ಕೃಷ್ಣ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮಂಗಳವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು.
ಸಾರ್ವಜನಿಕ ಅಂತಿಮ ದರ್ಶನದ ಬಳಿಕ ಎಸ್.ಎಂ. ಕೃಷ್ಣ ಅವರ ಪಾರ್ಥೀವ ಶರೀರವನ್ನು ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ತರಲಾಗಿದ್ದು, ಇಂದು ಸೋಮನಹಳ್ಳಿಯಲ್ಲಿಯೇ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ನಡೆದಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಗೌರವ ಪೂರ್ವಕವಾಗಿ ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯ್ತು.
ವೈದಿಕ ಪಂಡಿತರಾದ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆದಿದ್ದು, ಮೊಮ್ಮಗ ಅಮರ್ತ್ಯ ಹೆಗ್ಡೆ ಅಗ್ನಿ ಸ್ಪರ್ಶ ಮಾಡಿದರು. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಕರ್ನಾಟಕ ರಾಜಕೀಯ ಮುತ್ಸದ್ದಿ ಎಸ್.ಎಂ ಕೃಷ್ಣ ಅವರಿಗೆ ಕಣ್ಣೀರಿನ ವಿದಾಯ ಹೇಳಲಾಯಿತು.
ಹೆಗಲು ಕೊಟ್ಟ ಡಿಕೆಶಿ :
ಮಂಡ್ಯ ಜಿಲ್ಲೆ ಮದ್ದೂರಿ ತಾಲೂಕಿನ ಸೋಮನಹಳ್ಳಿ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ ನೆರೆವೇರಿತು. ಎಸ್ಎಂ ಕೃಷ್ಣ ಅವರ ಅಂತಿಮ ಯಾತ್ರೆಗೆ ಡಿಕೆ ಶಿವಕುಮಾರ್ ಕೂಡ ಹೆಗಲು ಕೊಟ್ರು. ಪಲ್ಲಕ್ಕಿಗೆ ಹೆಗಲು ಕೊಟ್ಟ ಡಿಕೆಶಿ ಒಂದು ಸುತ್ತು ಬಂದು ಗುರುಗಳಿಗೆ ಅಂತಿಮ ನಮನ ಸಲ್ಲಿಸಿದ್ರು.
ಸಜ್ಜನ ರಾಜಕಾರಣಿ, ಅಜಾತಶತ್ರುವಾಗಿದ್ದ ಎಸ್ ಎಂ ಕೃಷ್ಣ ನಿಧನಕ್ಕೆ ಅನೇಕರು ಕಂಬನಿ ಮಿಡಿದ್ರು. ಗುರು-ಶಿಷ್ಯರ ಬಾಂಧವ್ಯ ಹೊಂದಿದ್ದ ಡಿಕೆ ಶಿವಕುಮಾರ್, ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಹೂಗುಚ್ಚ ಅರ್ಪಿಸಿದ್ರು. ತಲೆಬಾಗಿ ನಮಸ್ಕರಿಸಿ ಗಳಗಳನೆ ಕಣ್ಣೀರು ಹಾಕಿದ್ರು
ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ
ಅಂತ್ಯಸಂಸ್ಕಾರದ ಸ್ಥಳದಲ್ಲಿ ಗಣ್ಯರಿಗೆ ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30 ಗಂಟೆಗೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಾನು ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನಡೆಸಲಾಯಿತು.
ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರೆವೇರಿಸಲಾಯಿತು. ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ ಮಾಡಲಾಯಿತು. 300 ಕೆಜಿ ಸೇವಂತಿಗೆ, ಗುಲಾಬಿ ಹಾಗೂ ಚೆಂಡು ಹೂವು ಬಳಕೆ ಮಾಡಲಾಗಿದೆ..

