ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು(ಡಿ.10) ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ
ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು.
ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ 1999 ರಿಂದ 2004ರವರೆಗೂ ಅಧಿಕಾರ ನಡೆಸಿದ ಅವರು, 2004- 2008ರಲ್ಲಿ ಯುಪಿಎ ಸರಕಾರದ ಮೊದಲ ಅವಧಿಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ, ನಂತರ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
ಕಾಂಗ್ರೆಸ್ನಿಂದ ಮುಖ್ಯಮಂತ್ರಿಯಾದ ಎಸ್ಎಂ ಕೃಷ್ಣ, ಮೊದಲು ರಾಜಕೀಯಕ್ಕೆ ಇಳಿದಿದ್ದು ಪಕ್ಷೇತರ ಅಭ್ಯರ್ಥಿಯಾಗಿ. 1962ರಲ್ಲಿ ಮದ್ದೂರು ವಿಧಾನಸಭೆ ಕ್ಷೇತ್ರದಲ್ಲಿ ಮೊದಲ ಚುನಾವಣೆಯಲ್ಲಿಯೇ ಗೆಲುವಿನ ನಗೆ ಬೀರಿದ್ದರು. ನಂತರ ಪ್ರಜಾ ಸೋಷಿಯಲಿಸ್ಟ್ ಪಕ್ಷ ಸೇರಿದ್ದರು. 1967ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದರು. 1968ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಬಳಿಕ ಕಾಂಗ್ರೆಸ್ ಸೇರಿದ ಅವರು 1971 ಹಾಗೂ 1980ರ ಚುನಾವಣೆಗಳಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.
ಕೆಪಿಸಿಸಿ ಅಧ್ಯಕ್ಷರಾದ ಅವರು 1999ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲುವಿನತ್ತ ಮುನ್ನಡೆಸಿದರು. ಮುಖ್ಯಮಂತ್ರಿ ಹುದ್ದೆಯೂ ಅನಾಯಾಸವಾಗಿ ಒಲಿದಿತ್ತು. ಯುಪಿಎ ಸರಕಾರದ ಮೊದಲ ಅವಧಿಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ, ಎರಡನೇ ಅವಧಿಯಲ್ಲಿ ರಾಜ್ಯಸಭೆ ಸದಸ್ಯತ್ವದ ಮೂಲಕ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದರು.
ಹಲವಾರು ದಶಕಗಳ ಕಾಲ ಕಾಂಗ್ರೆಸ್ ಕಟ್ಟಾಳುವಾಗಿದ್ದ ಅವರು, 2017ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಅಚ್ಚರಿ ಮೂಡಿಸಿದರು. ಆದರೆ ಇಳಿವಯಸ್ಸಿನಲ್ಲಿ ಅವರು ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲಿಲ್ಲ. 2023ರ ಜನವರಿ 7ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದ ಕೃಷ್ಣ, ಈಗ ಇಹಲೋಕ ತ್ಯಜಿಸಿದ್ದಾರೆ.

