ಕಲಬುರಗಿ: ಪಿಕಪ್ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ನಡೆದಿದೆ.
ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮೃತರೆಲ್ಲರೂ ಹೈದರಾಬಾದ್ ಮೂಲದವರು ಎಂದು ತಿಳಿದು ಬಂದಿದ್ದು, ಗಾಣಗಾಪುರದ ದತ್ತಾತ್ರೆಯ ದೇವರ ದರ್ಶನಕ್ಕೆ ತೆರಳುತ್ತಿದ್ದರು ಎನ್ನಲಾಗುತ್ತಿದೆ. ಮೃತರನ್ನು ಭಾರ್ಗವ ಕೃಷ್ಣ ಸಂಗೀತಾ,ಉತ್ತಮ ರಾಘವನ್ ಹಾಗೂ ಓರ್ವ ಕಾರು ಚಾಲಕ ಎಂದು ಗುರುತಿಸಲಾಗಿದೆ.
ಈ ಘಟನೆಯಿಂದ ಕೆಲ ಕಾಲ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಿಪಿಐ ಶಿವಶಂಕರ ಸಾಹು, ಮಹಾಗಾಂವ್ ಪಿಎಸ್ಐ ಆಶಾ ರಾಠೋಡ್ ಮತ್ತು ಸಿಬ್ಬಂದಿ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

